ಬೆಂಗಳೂರು,ಫೆ.10- ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ.
ತಮನ್ನಾ ಅವರು ಇಂದಿನಿಂದ ವಿದ್ಯುಕ್ತ ರಾಯಭಾರಿಯಾಗಿದ್ದು, ಕೆ.ಎಸ್.ಡಿ.ಎಲ್ನ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಹೊಂದಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಬ್ಯೂಟಿ ತಮನ್ನಾ ಅವರನ್ನು ನೇಮಕ ಮಾಡಲಾಗಿದ್ದು, ಉತ್ತರ ಭಾರತದಲ್ಲೂ ಮೈಸೂರು ಸ್ಯಾಂಡಲ್ ಸೋಪ್ ಸಹಿತ ಸಂಸ್ಥೆಯ ಉತ್ಪನ್ನಗಳನ್ನು ಮಾರುಕಟ್ಟೆಯ ಮುಕ್ತಅವಕಾಶ ಸೃಷ್ಟಿಸಿಕೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸಂಸ್ಥೆಯಲ್ಲಿ 57 ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮಗಲ್ಲಿ ಕಾಣಿಸಿಕೊಳ್ಳಲಿದ್ದು, ಮುಂದಿನ 2 ವರ್ಷಗಳ ಅವಧಿಯಲ್ಲಿ ಉಳಿದ ಖಾಸಗಿ ಸಂಸ್ಥೆಗಳ ಉತ್ಪನ್ನಗಳ ಪ್ರಚಾರದಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕೆ.ಎಸ್.ಡಿ.ಎಲ್ನ ಸ್ಯಾಂಡಲ್ ಸೋಪ್, ಶವರ್ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್ ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ಇದರೊಟ್ಟಿಗೆ ವಿಜಯಪುರ ಮತ್ತು ಡಾಬಸ್ಪೇಟೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುವುದು ಎಂದರು.
ಶಾಸಕ ಸಿ.ಎಸ್ ಅಪ್ಪಾಜಿ ನಾಡಗೌಡ ಮಾತನಾಡಿ, ಮಾರುಕಟ್ಟೆ ವಿಸ್ತರಣೆಗೆ ದೆಹಲಿ, ಮಧ್ಯಭಾರತ ಮುಂತಾದ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಯೂರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿಯೂ ಉತ್ಪನ್ನ ಮಾರಾಟ ಆರಂಭಿಸುವುದು ನಮ ಗುರಿಯಾಗಿದ್ದು, ಅನಿವಾಸಿ ಕನ್ನಡಿಗರಿಗೂ ಸಂಸ್ಥೆಯ ಉತ್ಪನ್ನಗಳು ತಲುಪಿಸುವುದು ನಮ ಧ್ಯೇಯ ಎಂದರು.
