ಬೆಂಗಳೂರು,ಸೆ.5– ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಉತ್ತೇಜನ ನೀಡಲು ರಾಜ್ಯದ 36,000 ಹೆಣ್ಣು ಮಕ್ಕಳಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ಅಜೀಮ್ ಪ್ರೇಮ್ಜಿ ಪ್ರತಿಷ್ಠಾನ ನೀಡಲಿದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
10ನೇ ತರಗತಿ ಸರ್ಕಾರಿ ಶಾಲೆಯಲ್ಲಿ ಹಾಗೂ ಪಿಯುಸಿ ಮಟ್ಟದ ಶಿಕ್ಷಣವನ್ನು ಸರ್ಕಾರಿ ಕಾಲೇಜಿನಲ್ಲಿ ಪಡೆದಿರುವ ಹೆಣ್ಣು ಮಕ್ಕಳಿಗೆ ಪಿಯುಸಿ ನಂತರದ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಅಜೀಮ್ ಪ್ರೇಮ್ಜಿ ಪ್ರತಿಷ್ಠಾನ ವಾರ್ಷಿಕ 110 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡಲಿದೆ ಎಂದರು.
ಸೆ.19 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಗುವುದು ಎಂದ ಅವರು, ರಾಜ್ಯದ 40 ಪದವಿ ಕಾಲೇಜುಗಳನ್ನು ಮತ್ತು 10 ರಿಂದ 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಜೊತೆಗೆ 9 ಸೆಂಟರ್ ಆಫ್ ಎಕ್ಸೆಲೆನ್ಸ್ ಕೇಂದ್ರಗಳನ್ನು ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಏಷ್ಯಾ ಅಭಿವೃದ್ಧಿ ಬ್ಯಾಂಕ್ನಿಂದ 2,500 ಕೋಟಿ ರೂ. ಪಡೆಯಲಾಗುವುದು ಎಂದು ಹೇಳಿದರು. ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲೂ ಬದಲಾವಣೆ ತರಲಾಗುವುದು. ಸದ್ಯದಲ್ಲೇ ರಾಜ್ಯ ಶಿಕ್ಷಣ ನೀತಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದರು.
ಪದವಿ ಕಾಲೇಜುಗಳ 2000 ಬೋಧಕರ ನೇಮಕಾತಿ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು. ಕೆಲವೇ ದಿನಗಳಲ್ಲಿ 310 ಪ್ರಾಂಶುಪಾಲರ ನೇಮಕಾತಿಯು ಪೂರ್ಣಗೊಳ್ಳಲಿದೆ. ಪದವಿ ಕಾಲೇಜುಗಳ 6,800 ಕ್ಕೂ ಹೆಚ್ಚು ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕರಿಗೆ ಪದೋನ್ನತಿ ನೀಡಲಾಗಿದೆ. ಯಾವುದೇ ಕಿರುಕುಳ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಬಡ್ತಿ ನೀಡಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಲಾಗಿದೆ. ಹೀಗೆ ಉನ್ನತ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.ಕಳೆದ ನವೆಂಬರ್ನಲ್ಲಿ 6 ವಿವಿಗಳ 30 ವಿದ್ಯಾರ್ಥಿಗಳು ಬ್ರಿಟಿಷ್ ಕೌನ್ಸಿಲಿಂಗ್ ಮೂಲಕ ವಿದೇಶ ಪ್ರವಾಸಕ್ಕೆ ಹೋಗಿದ್ದರು. 15 ದಿನಗಳ ಪ್ರವಾಸ ಪೂರ್ಣಗೊಳಿಸಿ ಬಂದ ನಂತರ ವಿದ್ಯಾರ್ಥಿಗಳಲ್ಲಿ ಆತವಿಶ್ವಾಸ ಹೆಚ್ಚಿದೆ ಎಂದು ಸಚಿವರು ತಿಳಿಸಿದರು.