ಬೆಂಗಳೂರು, ಸೆ.20- ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಸೃಷ್ಟಿಯಾಗಬೇಕೆಂದು ಯಾರೂ ಬಯಸುವುದಿಲ್ಲ, ಹೆಚ್ಚಿನ ವಾಹನಗಳ ಸಂಚಾರ ಹಾಗೂ ನಿಸರ್ಗದತ್ತವಾಗಿ ನಿರಂತರ ಮಳೆಯಿಂದ ಗುಂಡಿಗಳಾಗುತ್ತಿವೆ. ಸರ್ಕಾರ ಸಮಸ್ಯೆಯನ್ನು ಸರಿಪಡಿಸುವ ಸಲುವಾಗಿಯೇ ಶ್ರಮಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಸಂಜೆ ಕೂಡ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಭೆ ನಡೆಸುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ಗುರುತಿಸಲು ಪೊಲೀಸ್ ಆಯುಕ್ತರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರೂ ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಅದನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಅವರು ಏನೂ ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚುತ್ತಿದ್ದೇವೆ.
ನನ್ನ ವಿವೇಚನಾಧಿಕಾರಿಯಲ್ಲಿರುವ ಅನುದಾನವನ್ನು ಸಮನಾಂತರವಾಗಿಯೇ ನೀಡುತ್ತಿದ್ದೇನೆ. ಅದನ್ನು ಬಳಸಿಕೊಂಡು ಕೆಲಸ ಮಾಡಲಿ, ಹಣ ಇಲ್ಲವೆಂಬ ಅಭಿಪ್ರಾಯವನ್ನು ಏಕೆ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಿಗೆ 25 ಕೋಟಿ ರೂ.ಗೂ ಹೆಚ್ಚಿನ ಹಣ ನೀಡಲಾಗಿದೆ ಎಂದರು. ಜಾತಿ ಜನಗಣತಿಯ ಸಂಬಂಧಪಟ್ಟಂತೆ ಸಭೆಯ ಬಳಿಕ ಪ್ರತಿಕ್ರಿಯಿಸುವುದಾಗಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.