Saturday, September 20, 2025
Homeರಾಜ್ಯಜಾತಿ ಗಣತಿ ವಿವಾದದ ನಡುವೆಯೇ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನ, ಮಹತ್ವದ ಸಮಾಲೋಚನಾ ಸಭೆ

ಜಾತಿ ಗಣತಿ ವಿವಾದದ ನಡುವೆಯೇ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನ, ಮಹತ್ವದ ಸಮಾಲೋಚನಾ ಸಭೆ

Amidst the caste census controversy, Vokkaliga community shows solidarity

ಬೆಂಗಳೂರು,ಸೆ.20- ಸೋಮವಾರದಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ಆರಂಭವಾಗುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಒಕ್ಕಲಿಗ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳ ಮಹತ್ವದ ಸಮಾಲೋಚನಾ ಸಭೆ ನಡೆಸಲಾಯಿತು.

ಜಾತಿಗಣತಿ ವಿಚಾರದಲ್ಲಿ ಸಾಕಷ್ಟು ಸಂಘರ್ಷ, ವಿವಾದಗಳು ತಲೆದೋರಿರುವ ಬೆನ್ನಲ್ಲೇ ಒಕ್ಕಲಿಗರ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು, ಸಂಘ ಸಂಸ್ಥೆಗಳು ಒಗ್ಗೂಡಿ ಸಮಾಲೋಚನೆ ನಡೆಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಲಾಯಿತು. ಜನಾಂಗದ ಹಿತ ಕಾಪಾಡಲು ಈ ಸಮೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

- Advertisement -

ವಿಜಯನಗರದ ಆದಿಚುಂಚನಗಿರಿ ಮಠದ ಸಮುದಾಯ ಭವನದಲ್ಲಿ ಇಂದು ನಡೆದ ಈ ಸಭೆಯಲ್ಲಿ ಪಟ್ಟನಾಯ್ಕನಹಳ್ಳಿಯ ಸ್ಫಟಿಕಪುರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಆದಿ ಚುಂಚನಗಿರಿ ವಿಜಯನಗರ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಸಚಿವ ಡಾ.ಎಂ.ಸಿ.ಸುಧಾಕರ್‌, ಸಂಸದ ಡಾ.ಕೆ.ಸುಧಾಕರ್‌, ಶಾಸಕರಾದ ಆರಗ ಜ್ಞಾನೇಂದ್ರ, ಗೋಪಾಲಯ್ಯ, ಎಸ್‌‍.ಟಿ.ಸೋಮಶೇಖರ್‌, ಟಿ.ಬಿ.ಜಯಚಂದ್ರ, ಶರತ್‌ ಬಚ್ಚೇಗೌಡ, ಸತೀಶ್‌ರೆಡ್ಡಿ, ಜಿ.ಟಿ.ದೇವೇಗೌಡ, ಡಾ.ರಂಗನಾಥ್‌, ಸುರೇಶ್‌ಗೌಡ, ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಿ.ಟಿ.ರವಿ, ಎಸ್‌‍.ಎಲ್‌.ಭೋಜೇಗೌಡ, ರವಿಕುಮಾರ್‌, ಗುಬ್ಬಿ ಶ್ರೀನಿವಾಸ್‌‍, ಎಚ್‌.ಸಿ.ಬಾಲಕೃಷ್ಣ, ರವಿ ಗಣಿಗ, ಉದಯ್‌, ಪುಟ್ಟಣ್ಣ, ಮಾಜಿ ಶಾಸಕರಾದ ರಾಮಚಂದ್ರಗೌಡ, ಡಿ.ಸಿ.ತಮಣ್ಣ, ಕೆ.ಜಿ.ಬೋಪಯ್ಯ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಸೇರಿದಂತೆ ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಸಮಾಲೋಚನಾ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು ಜಾತಿಗಣತಿ ಕುರಿತು ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಮಠಾಧೀಶರು ಜಾತಿಗಣತಿ ಸಂದರ್ಭದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಿದರು.

ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ಬರೆಸಿದರೆ ಸಣ್ಣಪುಟ್ಟ ಜಾತಿಗಳು, ಉಪಜಾತಿಗಳು, ಪಂಗಡಗಳು ಒಗ್ಗೂಡಲು ಸಹಕಾರಿಯಾಗುತ್ತದೆ. ಸಂಘಟಿತರಾದರೆ ಹಕ್ಕುಗಳ ರಕ್ಷಣೆ, ಹೋರಾಟ, ಪ್ರಾತಿನಿಧ್ಯಕ್ಕೆ ಅನುಕೂಲವಾಗಲಿದೆ. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯ, ಸಿದ್ಧಾಂತ ಇದ್ದರೂ ಜನಾಂಗದ ವಿಚಾರದಲ್ಲಿ ಎಲ್ಲರೂ ಒಗ್ಗೂಡುವ ಅನಿವಾರ್ಯತೆ ಇದೆ.
ಜನರ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಜನಾಂಗವನ್ನು ಜಾಗೃತಗೊಳಿಸಿ ಏನು ಮಾಡಬೇಕು, ಏನು ಮಾಡಬಾರದು ಎಂಬ ತಿಳಿವಳಿಕೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಅಂತಿಮವಾಗಿ ಆದಿಚುಂಚನಗಿರಿ ಮಠದ ಶ್ರೀಗಳು ನೀಡುವ ಸಲಹೆ ಸೂಚನೆಯನ್ನು ಪಾಲಿಸಲು ಬದ್ಧವಾಗಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಸಣ್ಣಪುಟ್ಟ ಜಾತಿಗಳನ್ನು ಬದಿಗಿರಿಸಿ ಒಕ್ಕಲಿಗ ಜಾತಿಯಲ್ಲೇ ನಮೂದಿಸಿದರೆ ಈಗ ಸರ್ಕಾರದಿಂದ ಸಿಗುತ್ತಿರುವ ಮೀಸಲಾತಿ, ವಿವಿಧ ಸೌಲಭ್ಯಗಳು ಕೈತಪ್ಪಬಹುದು. ಈಗಿರುವ ಜಾತಿ, ಉಪಜಾತಿಗಳನ್ನೇ ಮುಂದುವರೆಸಿದರೆ ಸಣ್ಣ ಸಣ್ಣ ಜಾತಿಗಳಾಗುವುದರಿಂದ ಸಂಘಟನಾತಕ ಹೋರಾಟಕ್ಕೆ ಹಿನ್ನಡೆಯಾಗಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಲಾಯಿತು.
ಸಮೀಕ್ಷೆಯ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸಲು ಈಗಾಗಲೇ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಒಕ್ಕಲಿಗ ಜನಾಂಗದವರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗಿತ್ತು. ಸಮುದಾಯದವರು ಸಮೀಕ್ಷೆಯಿಂದ ಯಾರೊಬ್ಬರೂ ಹೊರಗುಳಿಯದಂತೆ ಎಲ್ಲರೂ ವಾಸ್ತವ ಮಾಹಿತಿಗಳನ್ನು ನೀಡಬೇಕು ಎಂಬ ವಿಚಾರದಲ್ಲಿ ಸಮಾಲೋಚನೆ ನಡೆಸಲಾಯಿತು.

ಈ ಬಗ್ಗೆ ಜನಾಂಗದವರಲ್ಲಿ ಸೂಕ್ತ ತಿಳಿವಳಿಕೆ ನೀಡಿ ವಸ್ತುನಿಷ್ಠ ಮಾಹಿತಿಯನ್ನು ನೀಡುವಂತೆ ಕರೆ ನೀಡಲಾಯಿತು.ಈ ಸಮೀಕ್ಷೆಯಲ್ಲಿ ಸಂಗ್ರಹಿಸಲಾಗುವ ದತ್ತಾಂಶಗಳು ಸರ್ಕಾರದ ನೀತಿ ನಿರೂಪಣೆ, ಕಾರ್ಯಕ್ರಮ ಆಯೋಜನೆ, ಮೀಸಲಾತಿ ನಿರ್ಧಾರ ಮಾಡಲು ಪರಿಗಣಿತವಾಗುವ ಸಾಧ್ಯತೆ ಇರುವುದರಿಂದ ಜಾಗೃತರಾಗಿ ನೈಜ ಮಾಹಿತಿಗಳನ್ನು ನೀಡುವಂತೆ ಮನವಿ ಮಾಡಲಾಯಿತು.

ಈ ಬಗ್ಗೆ ಜನಾಂಗದವರು, ಸಂಘ ಸಂಸ್ಥೆಗಳು ತಮ ತಮ ವ್ಯಾಪ್ತಿಯಲ್ಲಿ ಅರಿವು ಮೂಡಿಸಿ ಎಲ್ಲರೂ ಗಣತಿ ವ್ಯಾಪ್ತಿಗೆ ಒಳಪಡುವಂತೆ ಮಾಡಲು ನಿರ್ಧರಿಸಲಾಯಿತು.ಒಟ್ಟಾರೆ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸಲು ತೀರ್ಮಾನಿಸಲಾಗಿದ್ದು, ಉಪಜಾತಿ ಕಾಲಂನಲ್ಲಿ ಅವರವರ ಉಪಜಾತಿಯನ್ನು ಬರೆಸಿಕೊಳ್ಳಲು ಸಲಹೆ ನೀಡಲಾಗಿದೆ.ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸುವುದರಿಂದ ಸಮುದಾಯದಲ್ಲಿ ಒಗ್ಗಟ್ಟು ಮೂಡುತ್ತದೆ. ಅಲ್ಲದೆ, ಸಮುದಾಯದ ನಿರ್ದಿಷ್ಟ ಜನಸಂಖ್ಯೆಯೂ ತಿಳಿಯುತ್ತದೆ ಎಂಬೆಲ್ಲಾ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

RELATED ARTICLES

Latest News