ಬೆಂಗಳೂರು,ಸೆ.23- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಸಂದರ್ಭದಲ್ಲಿ ಹೊರಗಿಟ್ಟಿರುವ 13 ದಲಿತ ಕ್ರೈಸ್ತ ಜಾತಿಗಳ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ಮನವಿ ಮಾಡಿದೆ.
ಈ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಗೆ ವಿಧಾನಪರಿಷತ್ನ ಮುಖ್ಯ ಸಚೇತಕ ಎನ್.ರವಿಕುಮಾರ್, ಉಪಾಧ್ಯಕ್ಷ ಎನ್.ಮಹೇಶ್, ಕಾರ್ಯದರ್ಶಿ ಶರಣು ತಳಿಕೇರಿ, ಮಾಜಿ ಸಂಸದ ಎಸ್.ಮುನಿಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಮತ್ತಿತರರ ನಿಯೋಗವು ಮನವಿಪತ್ರ ಸಲ್ಲಿಸಿ ಜನತೆಯಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕೆಂದು ಕೋರಿದೆ. ಕ್ರಿಶ್ಚಿಯನ್ ಉಪಜಾತಿಗಳ ಸಮೀಕ್ಷೆಯ ಆಪ್ನಲ್ಲಿ ಬಹಿರಂಗಪಡಿಸದ ಅಧಿಕೃತ ಪ್ರಕಟಣೆಯನ್ನು ಆಯೋಗ ಕೊಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ವಿಷಯದಲ್ಲಿ ಅತ್ಯಂತ ಜವಾಬ್ದಾರಿಯುತ ಸಂಸ್ಥೆಯಾದ ಹಿಂದುಳಿದ ವರ್ಗಗಳ ಆಯೋಗ 33 ಕ್ರೈಸ್ತ ಜಾತಿಗಳ ಬಗ್ಗೆ ಸ್ಪಷ್ಟನೆ ಕೊಟ್ಟು, ಉಳಿದ 13 ದಲಿತ ಕ್ರೈಸ್ತ ಜಾತಿಗಳ ಬಗ್ಗೆ ಸ್ಪಷ್ಟನೆ ಕೊಡದೆ, ಕತ್ತಲಲ್ಲಿ ಇಟ್ಟಿರುವುದು ಸಮರ್ಥನೀಯವಲ್ಲ ಎಂದು ಆಕ್ಷೇಪಿಸಿದೆ. ಎರಡು ತಿಂಗಳ ಹಿಂದೆಯಷ್ಟೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ 101 ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನೇ ಮಾಡಿತ್ತು. ಆಗ ಈ 15 ಕ್ರೈಸ್ತ ಎಸ್ಸಿ ಜಾತಿಗಳು ಇರಲಿಲ್ಲ. ನ್ಯಾ.ನಾಗಮೋಹನ್ದಾಸ್ ಆಯೋಗದ ಸಮೀಕ್ಷೆಯ ದತ್ತಾಂಶಗಳ ಆಧಾರದಲ್ಲಿ ಪ್ರವರ್ಗಗಳ ರಚನೆಯಾಗಿ ಮೀಸಲಾತಿಯ ವರ್ಗೀಕರಣವಾಗಿದೆ.
ಈಗ ನಿಮ ಆಯೋಗದಿಂದ 15 ಹೊಸ ಕ್ರೈಸ್ತ ಎಸ್ಸಿ ಜಾತಿಗಳ ಸೇರ್ಪಡೆಯಾಗಿ ಸಮೀಕ್ಷೆ ನಡೆದರೆ ದೊಡ್ಡ ಗೊಂದಲ ಉಂಟಾಗಿ ದತ್ತಾಂಶಗಳು ಏರುಪೇರಾಗುತ್ತದೆ.
ಹೀಗಾಗಿ ನೀವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದೆ.
ಆನ್ಲೈನ್ನಲ್ಲಿ ಲಭ್ಯವಿರುವ ತಮ ಆಯೋಗದ ಕೈಪಿಡಿಯಲ್ಲಿ ತಾವು ಈ ತಪ್ಪನ್ನು ಸರಿಪಡಿಸಿರುವುದು ನಿಜ. ಆದರೆ ಸಮೀಕ್ಷೆಗೆ ಬಳಸುವ ಆ್ಯಪ್ನಲ್ಲಿಯೂ ಈ 15 ಎಸ್ಸಿ ಜಾತಿಗಳನ್ನು ಬಹಿರಂಗಪಡಿಸಬೇಕು ಮತ್ತು ಅದನ್ನು ಸಾರ್ವಜನಿಕರ ಅವಗಾಹನೆಗೆ ಮಾಧ್ಯಮಗಳ ಮೂಲಕ ಸ್ಪಷ್ಟಪಡಿಸಬೇಕು. ಈ ಬಗ್ಗೆ ಆಯೋಗದ ಅಧ್ಯಕ್ಷರು ತುರ್ತು ಗಮನ ಹರಿಸಬೇಕೆಂದು ಬಿಜೆಪಿ ವಿನಂತಿಸಿದೆ.