ಹಾಸನ,ಫೆ.20- ನಗರದ ವಿಜಯನಗರ ಸಮೀಪದ ಗುಡ್ಡೇನಹಳ್ಳಿ ಕೊಪ್ಪಲುನಲ್ಲಿ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಕೇಶ್(29) ಮತ್ತು ಮಯೂರ್ (27) ಎಂದು ಗುರುತಿಸಲಾಗಿದೆ.
ಈ ದುರ್ಘಟನೆಯಲ್ಲಿ ಇಬ್ಬರು ಯುವಕರು ಸಂಚರಿಸುತ್ತಿದ್ದ ಬೈಕ್ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ಅತ್ಯಂತ ಮನಕಲಕುವ ಅಂಶವೆಂದರೆ, ರಾಕೇಶ್ ಅವರ ಮದುವೆ ಇನ್ನೆರಡು ತಿಂಗಳಲ್ಲಿ ನಡೆಯಬೇಕಿತ್ತು. ಕುಟುಂಬದವರು ಮದುವೆ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ ದೃಶ್ಯಗಳು ಮನಃ ಕಲಕುವಂತಿತ್ತು.
ಘಟನೆಗೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.ರಸ್ತೆ ಸುರಕ್ಷತೆ ಪಾಲಿಸಲು ಮನವಿ: ಪೊಲೀಸರು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಕುರಿತು ಮನವಿ ಮಾಡಿದ್ದು, ಅತಿವೇಗ ಮತ್ತು ಅಜಾಗರೂಕ ಚಾಲನೆ ಪ್ರಾಣಾಪಾಯಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಒಂದು ಕ್ಷಣದ ನಿರ್ಲಕ್ಷ್ಯವೇ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಎಷ್ಟು ಬಾರಿ ಎಚ್ಚರಿಕೆ ನೀಡಿದರೂ ಯುವಕರು ನಿರ್ಲಕ್ಷ್ಯ ವಹಿಸುತ್ತಿದ್ದು ಈ ರೀತಿಯ ಘಟನೆಗಳು ಮರುಕಳುಹಿಸುತ್ತಿದೆ. ಆದ್ದರಿಂದ ಸುರಕ್ಷತೆ ಚಾಲನೆ ಹಾಗೂ ಸಂಚಾರ ನಿಯಮ ಪಾಲಿಸುವಂತೆ ಪೊಲೀಸರು ತಿಳಿಸಿದ್ದಾರೆ.
