ಶಿವಮೊಗ್ಗ,ಅ.5-ರಾಜ್ಯದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ಹೆಸರಿನಲ್ಲಿ ಅಹಿಂದವನ್ನು ಓಲೈಸಲು ಮುಂದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ,ಜಾತಿ ಸಮೀಕ್ಷೆ ಸಂಪೂರ್ಣ ಅವೈಜ್ಞಾನಿಕ ವಾಗಿದೆ. ಕಾಂಗ್ರೆಸ್ ಸಚಿವರೇ ಈ ಸಮೀಕ್ಷೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು ಇನ್ನು . ರಾಜ್ಯ ಹೈಕೋರ್ಟ್ ಕೂಡ ಈ ಸಮೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಮಾಹಿತಿ ನೀಡುವ ಅವಶ್ಯಕತೆ ಇಲ್ಲ ಎಂದು ತೀರ್ಪು ನೀಡಿದೆ,ಜನರಿಗೂ ಇದರಲ್ಲಿ ಆಸಕ್ತಿ ಇಲ್ಲ ಎಂದು ಟೀಕಿಸಿದರು.
ಹೀಗಿದ್ದಾಗ ವಾಸ್ತವವಾಗಿ ಜಾತಿಗಣತಿ ಮಾಡಿ ಪ್ರಯೋಜನವೇನು ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನಿಸಿದ್ದರೆ.ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೇ ಚುನಾವಣೆಯಲ್ಲಿ ಟಿಕೇಟ್ ನೀಡದೆ ಸಂಸತ್ ಒಳಗೆ ಪ್ರವೇಶಿಸದಂತೆ ಕುತಂತ್ರ ಮಾಡಿದ್ದರು.
ಹಿಂದುಳಿದ ವರ್ಗಗಳ ಬಗ್ಗೆ ಕಾಕಾ ಕಾಲೇಕರ್ ವರದಿಯನ್ನು ಕಾಂಗ್ರೆಸ್ 40 ವರ್ಷಗಳ ಕಾಲ ಕತ್ತಲಲ್ಲಿಟ್ಟಿದ್ದು ಐತಿಹಾಸಿಕ ದ್ರೋಹ ಎಂದು ದೂರಿದರು.ಊಳುವವನೇ ಒಡೆಯ ಎಂಬ ಕಾನೂನನ್ನು ತಂದು ಹಿಂದುಳಿದವರ ಉನ್ನತಿಗೆ ಕಾರಣರಾದ ಡಿ.ದೇವರಾಜ್ ಅರಸು ಅವರನ್ನೇ ಪಕ್ಷದಿಂದ ಹೊರಗೆ ಹಾಕಿದ್ದು ಯಾರು,ಇತಿಹಾಸ ಮರೆತಿದ್ದಾರೆ ಎಂದು ಆರೋಪಿಸಿದರು.
ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಎಲ್ಲ ಜಾತಿಯವರಿಗೂ ಸಮಾನವಾಗಿ ಆರ್ಥಿಕ ಸೌಲಭ್ಯ ನೀಡಿದ್ದರು. ಅವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧು ಬಂಗಾರಪ್ಪಗೆ ಇಲ್ಲ ಎಂದು ತಿರುಗೇಟು ನೀಡಿದರು.
ಮಡಿವಾಳ ಮಾಚೀದೇವ, ಉಪ್ಪಾರ, ಆರ್ಯವೈಶ್ಯ, ವಿಶ್ವಕರ್ಮ, ಅಂಬಿಗರ ಚೌಡಯ್ಯ, ಈಡಿಗ, ಸವಿತಾ ಸಮಾಜ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಅನುದಾನ ನೀಡಿದ ಬಿಎಸ್ವೈ ಸಂಗೋಳ್ಳಿ ರಾಯಣ್ಣ, ಕನಕದಾಸರ ಜನ್ಮಸ್ಥಳ ಬಾಡಾದ ಅಭಿವೃದ್ಧಿಗೆ ಅನುದಾನ ನೀಡಿದರೂ ಕಾಂಗ್ರೆಸ್ ಕೆಲಸ ಮಾಡಿರಲಿಲ್ಲ. ಇದಕ್ಕೆ ಬಿ.ಎಸ್. ಯಡಿಯೂರಪ್ಪನವರೇ ಬರಬೇಕಿತ್ತಾ ಎಂದು ತಿರುಗೇಟು ನೀಡಿದರು.
ಸರ್ವಸ್ಪರ್ಶಿ ಸರ್ವರಿಗೆ ಸಮಪಾಲು-ಸಮಬಾಳು ಆಡಳಿತ ನೀಡಿದ ಯಡಿಯೂರಪ್ಪನವರು ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಇನ್ನು ಟವರ್ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರ ಸುಮ್ಮನೆ ಕೂತಿಲ್ಲ. ಶಿವಮೊಗ್ಗ ಜಿಲ್ಲೆಗೆ ನೆಟ್ವರ್ಕ್ ಸಮಸ್ಯೆ ಇದ್ದಕಡೆ ನೂತನವಾಗಿ 90 ಟವರ್ಗಳನ್ನು ಈಗಾಗಲೇ ನೀಡಲಾಗಿದೆ ಮತ್ತು ಅವು ಕಾರ್ಯಾಚರಣೆ ಶುರುಮಾಡಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಚಂದ್ರಶೇಖರ ಇದ್ದರು.