ರಾಮನಗರ,ಫೆ.21– ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಳ್ಳೇಗೌಡನಪಾಳ್ಯದ ನಿವಾಸಿ ಸಿಂಚನ(21) ಕೊಲೆಯಾದ ಮಹಿಳೆ. ಪತ್ನಿಯ ಶೀಲ ಶಂಕಿಸಿ ಆಗಾಗ್ಗೆ ಪತಿ ರೇಣುಕಯ್ಯ ಗಲಾಟೆ ಮಾಡುತ್ತಿದ್ದ. ಇದೇ ವಿಚಾರವಾಗಿ ಕಳೆದ ರಾತ್ರಿಯೂ ದಂಪತಿ ನಡುವೆ ಗಲಾಟೆ ನಡೆದಿದೆ.
ಜಗಳದ ವೇಳೆ ರೇಣುಕಯ್ಯ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಕುಸಿದು ಬಿದ್ದ ಸಿಂಚನ ಮೇಲೆ ಮನೆಮುಂದೆಯೇ ಇದ್ದ ಕಲ್ಲು ತೆಗೆದುಕೊಂಡು ಆಕೆ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಸುದ್ದಿ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
