ಬೆಂಗಳೂರು,ಡಿ.2- ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಕಾನೂನಿನ ಕುಣಿಕೆಗೆ ಸಿಲುಕಿದ್ದ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಆರೋಪಿಗಳಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದು ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ತಮ ಕಕ್ಷಿದಾರರ ವಿರುದ್ಧ ವಿಶೇಷ ಸತ್ರ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಸಮನ್್ಸ ನೀಡಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಪರ ವಕೀಲರಾದ ಸಿದ್ದಾರ್ಥ ಲೂತ್ರ ಹಾಗೂ ಸಿದ್ದಾರ್ಥ್ ಧವೆ ಅವರುಗಳು ಸುಪ್ರೀಂಕೋರ್ಟ್ಗೆ ಮೇಲನವಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಸಿಐಡಿಗೆ ಹಾಗೂ ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ.
ಸುಪ್ರೀಂಕೋರ್ಟ್ ಈ ಪ್ರಕರಣಕ್ಕೆ ಏಕೆ ತಡೆಯಾಜ್ಞೆ ನೀಡಿದೆ ಎಂಬುದನ್ನು ಹೈಕೋರ್ಟ್ಗೆ ನೀವೇ ಮನವರಿಕೆ ಮಾಡಿಕೊಡಿ ಎಂದು ಸಿಐಡಿಗೆ ಸುಪ್ರೀಂಕೋರ್ಟ್ ನೋಟೀಸ್ನಲ್ಲಿ ಸೂಚಿಸಿದೆ. ಇದಕ್ಕೂ ಮುನ್ನ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲರು 2025ರ ಫೆಬ್ರವರಿ 7ರಂದು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ತಪ್ಪಾಗಿ ಭಾವಿಸಿದೆ. ಹೀಗಾಗಿ ಸಮನ್ಸ್ ರದ್ದುಗೊಳಿಸಬೇಕೆಂದು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಮನವಿ ಮಾಡಿದರು.
ಯಡಿಯೂರಪ್ಪ ಪ್ರಕರಣವನ್ನು ಅರ್ಹತೆ ಆಧಾರದ ಮೇಲೆ ಪರಿಗಣಿಸಿಲ್ಲ. ಹೈಕೋರ್ಟ್ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಭಾವಿಸಿದೆ. ಹೀಗಾಗಿ ಸಮನ್್ಸ ರದ್ದುಪಡಿಸಲು ಪ್ರಕರಣವು ಸೂಕ್ತವಾಗಿದೆ ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು.
ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. 88 ವರ್ಷದ ಹಿರಿಯ ವ್ಯಕ್ತಿ 4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿರುವ ಅವರ ವಿರುದ್ಧ ರಾಜಕೀಯ ದ್ವೇಷದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೀಠದ ಗಮನಕ್ಕೆ ತಂದರು.
ಆಗ ಮಧ್ಯಪ್ರವೇಶ ಮಾಡಿದ ಮುಖ್ಯ ನ್ಯಾಯಮೂರ್ತಿಗಳು, ಇದನ್ನು ನೀವೇ ಹೈಕೋರ್ಟ್ಗೆ ಹೋಗಿ ಏಕೆ ಮನವರಿಕೆ ಮಾಡಬಾರದು? ಅಲ್ಲಿಯೇ ಇತ್ಯರ್ಥಪಡಿಸಬಹುದಲ್ಲವೇ ಎಂದು ವಕೀಲರಿಗೆ ಪ್ರಶ್ನೆ ಮಾಡಿದರು. ಅಂತಿಮವಾಗಿ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿ ಸಿಐಡಿಗೆ ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿತು.
ಪೋಕ್ಸೊ ಅಪರಾಧಕ್ಕೆ ಸಂಬಂಧಿಸಿದಂತೆ ತಮ ವಿರುದ್ಧದ ಆರೋಪಗಳನ್ನು ಪರಿಗಣಿಸಿ ಬೆಂಗಳೂರಿನ ಸತ್ರ ನ್ಯಾಯಾಲಯ ಹೊರಡಿಸಿರುವ ಸಮನ್ಸ್ ಜಾರಿ ಆದೇಶ ರದ್ದುಗೊಳಿಸಬೇಕು ಎಂದು ಕೋರಿ ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ ಮರಿಸ್ವಾಮಿ ಸಲ್ಲಿಸಿದ್ದ ಎರಡು ಪ್ರತ್ಯೇಕ ರಿಟ್ ಅರ್ಜಿಗಳನ್ನು ಹೈಕೋರ್ಟ್ ಈಚೆಗೆ ವಜಾಗೊಳಿಸಿತ್ತು.
ಯಡಿಯೂರಪ್ಪ ಅವರ ಹಾಜರಿ ಅಗತ್ಯವಿಲ್ಲ ಎಂದಾದರೆ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ವಿನಾಯತಿ ಮನವಿಯನ್ನು ಪುರಸ್ಕರಿಸಬೇಕು. ಈ ಪೀಠ ಮತ್ತು ಸಕ್ಷಮ ನ್ಯಾಯಾಲಯದ ಆದೇಶಗಳಲ್ಲಿ ಉಲ್ಲೇಖಿಸಲಾದ ಅಂಶಗಳ ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದಿರುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಪ್ರಕರಣವನ್ನು ನಿರ್ಧರಿಸಬೇಕು ಎಂದು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.
ಪ್ರಕರಣದ ಹಿನ್ನೆಲೆ: ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ನ್ಯಾಯ ಕೊಡಿಸಿ ಎಂದು ಬೇಡಿ ಆರ್ಎಂವಿ 2ನೇ ಹಂತದಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ತಾಯಿಯೊಬ್ಬರು (ಈಗ ಬದುಕಿಲ್ಲ) ಬಂದಿದ್ದರು.
ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು, ಸಂತ್ರಸ್ತೆಯಾದ 14 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುವುದಾಗಿ ತಿಳಿಸಿ ಆಕೆಯನ್ನು ತಮ ಕೋಣೆಯೊಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಸಂತ್ರಸ್ತ ಬಾಲಕಿಯ ತಾಯಿಯು ಸದಾಶಿವನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
2024ರ ಫೆಬ್ರವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ಈ ಘಟನೆ ನಡೆದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.
ಇದನ್ನಾಧರಿಸಿ ಪೊಲೀಸರು ಕಾನೂನಿನ ಚೌಕಟ್ಟಿನಲ್ಲಿ ಇದು ಅಪರಾಧ ಎನಿಸಿದೆ ಎಂದು ಐಪಿಸಿ ಸೆಕ್ಷನ್ 354 ಎ, 204, 214 ಹಾಗೂ 37 ಮತ್ತು ಪೋಕ್ಸೊ-2012ರ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ) ಸೆಕ್ಷನ್ 8ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದ್ದರು.
ಪ್ರಕರಣ ಪರಿಗಣಿಸಿದ್ದ ವಿಶೇಷ ನ್ಯಾಯಾಲಯ, 2025ರ ಫೆಬ್ರವರಿ 28ರಂದು ಯಡಿಯೂರಪ್ಪ ಮತ್ತು ಇತರರಿಗೆ ಸಮನ್್ಸ ಜಾರಿಗೊಳಿಸಿ ಆದೇಶಿಸಿತ್ತು. ಆರೋಪಿಗಳು ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ವಿಚಾರಣೆ ಮುಂದುವರಿಯಲು ಅನುವು ಮಾಡಿಕೊಟ್ಟಿತ್ತು.
ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯಿದೆಯ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354ಎ, 204, 214 ಮತ್ತು 37ರ ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಕ್ಕಾಗಿ ಆರೋಪಿಗಳನ್ನು ವಿಚಾರಣೆಗೊಳಪಡಿಸಲಿದೆ.
