ಬೆಂಗಳೂರು, ಮಾ.25- ಹಾಡಹಗಲೇ ಜನನಿಬಿಡ ಸ್ಥಳದಲ್ಲಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಪಾಲಕೃಷ್ಣ ನಾಯಕ್(45) ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ.
ಇಂದು ಬೆಳಿಗ್ಗೆ 10 ಗಂಟೆ ಸುಮಾರಿನಲ್ಲಿ ಗೋಪಾಲಕೃಷ್ಣ ನಾಯಕ್ ಅವರು ಅಂಕೋಲಾದ ಮಾರ್ಕೆಟ್ಗೆ ಕಾರಿನಲ್ಲಿ ಬಂದು ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗಿದ್ದು, ವಾಪಸ್ ಕಾರಿನ ಬಳಿ ಬರುತ್ತಿದ್ದಂತೆ ಗೋವಾ ನೋಂದಣಿಯ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ರಾಡಿನಿಂದ ಅವರ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ತಲೆ ಹಾಗೂ ಕುತ್ತಿಗೆ ಬಳಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ.
ಮಾರ್ಕೆಟ್ ಪ್ರದೇಶದಲ್ಲಿದ್ದ ಜನರು ಗೋಪಾಲಕೃಷ್ಣ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆಗೆ ದಾಖಲಿಸಿ, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಗೋವಾ ನೋಂದಣಿಯ ಕಾರು ಎಂಬುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಯಾರು ಯಾವ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
