ನವದೆಹಲಿ, ಮಾ.27- ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯ ನಡುವೆಯೂ ದೇಶದಲ್ಲಿ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಸಂಗ್ರಹ ಲಭ್ಯವಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಕೇಳಲಾದ ಪೂರಕ ಪ್ರಶ್ನೆಗೆ ಉತ್ತರಿಸಿದ ಅವರು, ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆ ರಸಗೊಬ್ಬರ ಲಭ್ಯತೆ ಕುರಿತು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ನಿನ್ನೆ ರಾಜ್ಯಗಳ ಕೃಷಿ ಸಚಿವರೊಂದಿಗೆ ಮಾತುಕತೆ ನಡೆಸಿ ರಸಗೊಬ್ಬರ ಸಂಗ್ರಹ ಸ್ಥಿತಿಯ ಕುರಿತು ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ರೈತರಿಗೆ ಬೇಕಾದಾಗ ರಸಗೊಬ್ಬರ ಲಭ್ಯವಾಗುವಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ದೇಶದಲ್ಲಿ ಸಾಕಷ್ಟು ಸಂಗ್ರಹವಿದ್ದು ಯಾವುದೇ ರೀತಿಯ ಭಯ ಅಥವಾ ಆತಂಕಕ್ಕೆ ಕಾರಣವಿಲ್ಲ ಎಂದು ನಡ್ಡಾ ಭರವಸೆ ನೀಡಿದ್ದಾರೆ.
ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ರಸಗೊಬ್ಬರ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಹೊಸ ಮಾರುಕಟ್ಟೆಗಳ ನಿಗದಿ ಮಾಡಿಕೊಂಡಿದೆಯೇ ಎಂದು ಕಾಂಗ್ರೆಸ್ ಸದಸ್ಯ ಮನೀಷ್ ತಿವಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಂಗಾರಿಗೆ ಬೇಕಾದಷ್ಟು ಸಂಗ್ರಹ ಈಗಾಗಲೇ ಲಭ್ಯವಿದೆ ಎಂದಿದ್ದಾರೆ.
ಇದಲ್ಲದೆ, ರಸಗೊಬ್ಬರ ಉತ್ಪಾದನೆಗೆ ಅಗತ್ಯವಾದ ಕಚ್ಚಾ ವಸ್ತುಗಳಿಗಾಗಿ ಹೊಸ ಮಾರುಕಟ್ಟೆಗಳು ಹಾಗೂ ಪರ್ಯಾಯ ಮೂಲಗಳನ್ನು ಹುಡುಕುವ ದಿಕ್ಕಿನಲ್ಲಿ ಸರ್ಕಾರ ಕಾರ್ಯತಂತ್ರ ರೂಪಿಸಿದೆ ಎಂದು ತಿಳಿಸಿದ್ದಾರೆ.
ಹಡಗು ಸಂಚಾರ ವ್ಯತ್ಯಯ ಮತ್ತು ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ರಸಗೊಬ್ಬರ ಆಮದು ಕುರಿತು ಆತಂಕಗಳು ವ್ಯಕ್ತವಾಗಿವೆ. ಭಾರತವು ರಸಗೊಬ್ಬರಗಳ ಪ್ರಮುಖ ಆಮದುದಾರ ರಾಷ್ಟ್ರಗಳಲ್ಲಿ ಒಂದಾಗಿದೆ.
