Wednesday, April 29, 2026
Homeರಾಜ್ಯಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ

ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ

Tight security in view of President Draupadi Murmu's visit to Siddaganga Mutt on April 1

ತುಮಕೂರು,ಮಾ.28- ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಏ.1ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ತುಮಕೂರು ನಗರದಾದ್ಯಂತ ಪೊಲೀಸ್‌‍ ಬಂದೋಬಸ್ತ್‌ ವ್ಯವಸ್ಥೆ ರೂಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಲ್ಲಿ ಮಾತನಾಡಿದ ಅವರು, ಈಗಾಗಲೇ ತುಮಕೂರು ಜಿಲ್ಲೆಗೆ ಉಪರಾಷ್ಟ್ರಪತಿ, ಕೇಂದ್ರ ಗೃಹ ಸಚಿವರು, ರಾಜ್ಯಪಾಲರು ಸೇರಿದಂತೆ ಗಣ್ಯರು ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ.

ಪ್ರಸ್ತುತ ರಾಷ್ಟ್ರಪತಿಯವರ ಕಾರ್ಯಕ್ರಮ ಅತಿಗಣ್ಯರ ಭದ್ರತೆ ಹೊಂದಿರುವುದರಿಂದ ಯಾವುದೇ ಲೋಪವಿಲ್ಲದಂತೆ ಭದ್ರತೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ನಿಯೋಜನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಭದ್ರತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌‍ ಅಧೀಕ್ಷಕ ಕೆ.ವಿ. ಅಶೋಕ್‌ ಅವರು, ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಅವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್‌‍ ಬಂದೋಬಸ್ತ್‌ ಏರ್ಪಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಷ್ಟ್ರಪತಿ ಅವರ ಭದ್ರತೆಗೆ ಸುಮಾರು 15,000 ಪೊಲೀಸ್‌‍ ಸಿಬ್ಬಂದಿ ನಿಯೋಜಿಸಲು ಪೊಲೀಸ್‌‍ ಇಲಾಖೆ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮತ್ತೆ ನಿರ್ಗಮಿಸುವವರೆಗೆ ತುಮಕೂರು ನಗರದಾದ್ಯಂತ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿರುತ್ತದೆ.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹೆಲಿಪ್ಯಾಡ್‌, ವಾಹನ ಸಂಚರಿಸುವ ರಸ್ತೆ ಮಾರ್ಗಗಳು ಹಾಗೂ ಕಾರ್ಯಕ್ರಮ ನಡೆಯುವ ಜಾಗ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ಪ್ರತ್ಯೇಕವಾದ ತಂಡಗಳನ್ನು ರಚಿಸಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗುತ್ತಿದೆ. ಅಲ್ಲದೆ, ಮಾರ್ಚ್‌ 31ರಂದೇ ತಾಲೀಮು ಪ್ರಕ್ರಿಯೆ ಹಾಗೂ ಪೊಲೀಸ್‌‍ ಸಿಬ್ಬಂದಿಗೆ ಮಾಹಿತಿ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪೊಲೀಸ್‌‍ ಇಲಾಖೆ ಹಮಿಕೊಂಡಿರುವುದಾಗಿ ಸಭೆಗೆ ಮಾಹಿತಿ ನೀಡಿದರು.

ನಗರದಾದ್ಯಂತ ಎಲ್ಲಾ ರಸ್ತೆಗಳನ್ನು ಪೊಲೀಸ್‌‍ ಬಂದೋಬಸ್ತಿನಲ್ಲಿ ಇರಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗುವುದು. ಅಲ್ಲದೆ, ಕಾರ್ಯಕ್ರಮ ನಡೆಯುವ ಜಾಗಕ್ಕೆ ಸಾರ್ವಜನಿಕರು, ಭಕ್ತರು ತೆರಳಲು ಪ್ರತ್ಯೇಕ ಪ್ರವೇಶ ದ್ವಾರಗಳನ್ನು ನಿಗಧಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯ ಸುಹಾಸ್‌‍ ಸೂಡ ಅವರು, ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಅತಿಗಣ್ಯರ ಭದ್ರತೆ ಇರುವುದರಿಂದ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತದಿಂದ ಅಧಿಕಾರಿಗಳನ್ನು ನಿಯೋಜಿಸಿ ಜವಾಬ್ದಾರಿ ವಹಿಸಿರುವುದು ಸ್ವಾಗತಾರ್ಹ. ಅಂತೆಯೇ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ನಿರ್ವಹಿಸಬೇಕಿದೆ ಎಂದರು.

ರಾಜ್ಯ ಗುಪ್ತಚರ ಇಲಾಖೆಯ ಪೊಲೀಸ್‌‍ ಅಧೀಕ್ಷಕ ಸುರೇಶ್‌, ಅಪರ ಜಿಲ್ಲಾಧಿಕಾರಿ ಡಾ. ಎನ್‌.ತಿಪ್ಪೇಸ್ವಾಮಿ, ಸಿದ್ಧಗಂಗಾ ಮಠದ ಪ್ರತಿನಿಧಿ ಮಲ್ಲಿಕಾರ್ಜುನ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ತುಮಕೂರು ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್‌ ಹಾಗೂ ಸಿದ್ದಗಂಗಾ ಮಠದ ಕಾರ್ಯಕ್ರಮ ನಡೆಯುವ ವೇದಿಕೆ ಇತ್ಯಾದಿ ಪ್ರದೇಶಗಳಿಗೆ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

RELATED ARTICLES

Latest News