ಬೆಂಗಳೂರು,ಏ.27- ಸ್ನೇಹಿತರ ಮನೆಗೆ ಹೋಗಿ ಇಂದು ಬೆಳಗಿನ ಜಾವ ಬೈಕ್ನಲ್ಲಿ ಹಿಂದಿರುಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯನಗರದ ಆರ್ಪಿಸಿ ಲೇಔಟ್ ನಿವಾಸಿ ಹರೀಶ್ (28) ಮೃತಪಟ್ಟ ಬೈಕ್ ಸವಾರ. ಹಿಂಬದಿ ಸವಾರ ಕೌಶಿಕ್ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಫೈನಾನ್ಸ್ ಕಂಪನಿಯ ಉದ್ಯೋಗಿಯಾಗಿದ್ದ ಹರೀಶ್ ನಿನ್ನೆ ರಾತ್ರಿ ಸ್ನೇಹಿತ ಕೌಶಿಕ್ನನ್ನು ಬೈಕ್ನಲ್ಲಿ ಕರೆದುಕೊಂಡು ಸ್ನೇಹಿತರನ್ನು ಮಾತನಾಡಿಸಲು ಅವರ ಮನೆಗೆ ಹೋಗಿದ್ದಾರೆ.
ಇಂದು ಬೆಳಗಿನ ಜಾವ 2.20ರ ಸುಮಾರಿನಲ್ಲಿ ಇವರಿಬ್ಬರೂ ಮನೆಗೆ ಹಿಂದಿರುಗುತ್ತಿದ್ದಾಗ ಔಟರ್ ರಿಂಗ್ ರಸ್ತೆಯ ಅಂಬೇಡ್ಕರ್ ಕಾಲೇಜು ಗೇಟ್ ಸಮೀಪ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಕೆಳಗೆ ಬಿದ್ದಿದ್ದಾರೆ.
ಗಂಭೀರ ಗಾಯಗೊಂಡಿದ್ದ ಹರೀಶ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಸಣ್ಣಪುಟ್ಟ ಗಾಯಗೊಂಡಿದ್ದ ಹಿಂಬದಿ ಸವಾರ ಕೌಶಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ.
ಈ ಬಗ್ಗೆ ಜ್ಞಾನಭಾರತಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಆರ್ಆರ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅತೀ ವೇಗದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
