ಬೆಂಗಳೂರು,ಏ.18- ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀ ಕಾರವಾಗದೇ ಸೋಲುಂಟಾಗಿರುವುದರಿಂದ ಕೆರಳಿ ಕೆಂಡವಾಗಿರುವ ಬಿಜೆಪಿ ಪಕ್ಷವು ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದೆ. ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ವಿರುದ್ಧ ಕನ್ಯಾಕುಮಾರಿಯಿಂದ ಕಾಶೀರದವರೆಗೂ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೋರಾಟಕ್ಕೆ ಕರೆ ಕೊಟ್ಟಿದೆ.
ರಾಜ್ಯದಲ್ಲಿ ನಾಳೆಯಿಂದ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಕಾಂಗ್ರೆಸ್ ಸರ್ಕಾರದ ಮಹಿಳಾ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ಎಲ್ಲಾ ಘಟಕಗಳಿಗೂ ಕರೆ ಕೊಟ್ಟಿದೆ.
ಮುಂಬರುವ ತಮಿಳುನಾಡು ಮತ್ತು ಪ.ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳನ್ನು ಮಹಿಳಾ ವಿರೋಧಿ ಎಂದು ಬಿಂಬಿಸಲು ಮುಂದಾಗಿರುವ ಬಿಜೆಪಿ ಮಸೂದೆ ವಿರೋಧಿಸುವವರಿಗೆ ತಕ್ಕ ಪಾಠ ಕಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದೆ.
ಉಳಿದಿರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು 2 ರಾಜ್ಯಗಳಲ್ಲಿ ಅಬ್ಬರದ ಪ್ರಚಾರ ನಡೆಸಿ ವಿಶೇಷವಾಗಿ ಕಾಂಗ್ರೆಸ್, ಡಿಎಂಕೆ ಮತ್ತು ಟಿಎಂಸಿ ಪಕ್ಷಗಳನ್ನು ಮಹಿಳಾ ವಿರೋಧಿ ಎಂದು ಬಿಂಬಿಸಲು ಮುಂದಾಗಿದೆ.
ಲೋಕಸಭೆಯಲ್ಲಿ ಮಸೂದೆಗೆ ಸೋಲು ಉಂಟಾಗುತ್ತಿದ್ದಂತೆ ಬಿಜೆಪಿಯ ಮಹಿಳಾ ಸದಸ್ಯರು ಸಂಸತ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವರು ಮತ್ತು ಸಂಸದರು ಆಯಾ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಪತ್ರಿಕಾಗೋಷ್ಠಿ ನಡೆಸುವ ಮೂಲಕ ಕಾಂಗ್ರೆಸ್ನ ಅಸಲಿ ಮುಖವನ್ನು ಬಯಲು ಮಾಡುವಂತೆ ದೆಹಲಿ ಬಿಜೆಪಿ ನಾಯಕರು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.
ಪ್ರತಿಭಟನೆ ಹಾಗೂ ಹೋರಾಟಗಳ ಬಗ್ಗೆ ಈಗಾಗಲೇ ರೂಪುರೇಷೆಗಳನ್ನು ಸಿದ್ಧಪಡಿಸಿರುವ ಬಿಜೆಪಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಕುರಿತು ದೆಹಲಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್ನ ಮುಖವಾಡ ದೇಶದ ಮುಂದೆ ಕಳಚಿದೆ. ಬಹುನಿರೀಕ್ಷಿತ ಮಸೂದೆಗೆ ಬೆಂಬಲ ನೀಡದೇ ಮಹಿಳೆಯರನ್ನು ಕೇವಲ ವೋಟ್ಬ್ಯಾಂಕಿಂಗ್ಗಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ನಾವು ಇದರ ವಿರುದ್ಧ ದೇಶದಾದ್ಯಂತ ಹೋರಾಟ ನಡೆಸಲಿದ್ದೇವೆ. ವಿರೋಧಪಕ್ಷಗಳು ಮಸೂದೆಗೆ ಬೆಂಬಲ ನೀಡಬಹುದೆಂದು ನಿರೀಕ್ಷೆ ಮಾಡಿದ್ದೆವು. ಇದು ಮಹಿಳೆಯರಿಗೆ ಮಾಡಿದ ಅಪಮಾನ. ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ ಎಂದರು. ಶಾಸನಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ ಜಾರಿಗೆ ಬಂದರೆ ಬಿಜೆಪಿಗೆ ಅದರ ಶ್ರೇಯಸ್ಸು ಸಲ್ಲುತ್ತದೆ ಎಂಬ ಕಾರಣಕ್ಕೆ ವಿರೋಧಿಸಿದ್ದಾರೆ. ದೇಶದ ಜನತೆಗೆ ಇದನ್ನು ಮನವರಿಕೆ ಮಾಡಿಕೊಡುತ್ತೇವೆ ಎಂದು ಅವರು ತಿಳಿಸಿದರು.
