ಬೆಂಗಳೂರು,ಜ.27- ಕಲ್ಯಾಣ ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಭದ್ರಪಡಿಸಿ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಷಾ ಸಂಜೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಸಚಿವರು ಮತ್ತಿತರರನ್ನು ಭೇಟಿಯಾಗಿ ಚುನಾವಣೆಗೆ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ.
ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಭೇಟಿ ಕೊಟ್ಟಿದ್ದ ಅಮಿತ್ ಷಾ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಕಾರ್ಯಕರ್ತರಲ್ಲಿ ಹುಮಸ್ಸು ತುಂಬಿದ್ದರು. ಇದೀಗ ಕಲ್ಯಾಣ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಸಚಿವರು, ಶಾಸಕರು, ಪದಾಧಿಕಾರಿಗಳನ್ನು ಭೇಟಿಯಾಗಲಿರುವ ಅಮಿತ್ ಷಾ ಮುಂಬರುವ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಬೇಕಾದ ರಣತಂತ್ರಗಳನ್ನು ರೂಪಿಸಲಿದ್ದಾರೆ.
ಜತೆಗೆ ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ದುರ್ಬಲಗೊಂಡಿರುವ ಪಕ್ಷದ ಸಂಘಟನೆ ಬಲಪಡಿಸಲು ಪ್ರಮುಖರ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದು, ರಣತಂತ್ರ ರೂಪಿಸಲಿದ್ದಾರೆ.
ರಾತ್ರಿ ದೆಹಲಿಯಿಂದ ಆಗಮಿಸುವ ಅಮಿತ್ ಶಾ, ಖಾಸಗಿ ಹೋಟೆಲ್ವೊಂದರಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಹುಬ್ಬಳ್ಳಿಯ ಕೆಎಲ್ಇ ಸೊಸೈಟಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಳಾಂಗಣ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಲ್ಲದೆ, ಅದೇ ಕಾಲೇಜಿನ ಮೈದಾನದಲ್ಲಿ ಕೆಎಲ್ಇ ಸೊಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಬಳಿಕ ಧಾರವಾಡದ ರಾಷ್ಟ್ರೀಯ ವಿಧಿ ವಿಜ್ಞಾನ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ ಕುಂದಗೋಳಕ್ಕೆ ತೆರಳಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪರೀಕ್ಷಾ ಪೇ ಚರ್ಚಾ: ಯುವಕರಿಗೆ ಒತ್ತಡ ಮುಕ್ತ ವಾತಾವರಣ ಸೃಷ್ಟಿಸುವ ಒಂದು ಆಂದೋಲನ
ಕುಂದಗೋಳದಲ್ಲಿ 300 ವರ್ಷಗಳ ಹಿಂದೆ ನಿರ್ಮಿಸಿದ ಪುರಾತನ ಶಂಭುಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಕುಂದಗೋಳದ ವಾರ್ಡ್ ಸಂಖ್ಯೆ 7ರ ಬೂತ್ ಸಂಖ್ಯೆ 50ರಲ್ಲಿ ಗೋಡೆ ಚಿತ್ರ ರಚಿಸುವ ಮೂಲಕ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸುವರು.
ನಂತರ ಸುಮಾರು ಒಂದೂವರೆ ಕಿ.ಮೀ. ಉದ್ದದ ರೋಡ್ ಶೋ ನಡೆಸಲಿದ್ದಾರೆ. ಒಂದೆರಡು ಮನೆಗಳಿಗೆ ಕರಪತ್ರ ವಿತರಣೆ, ಮಿಸ್ಡ್ ಕಾಲ್ ಮೂಲಕ ಸದಸ್ಯತ್ವ ಅಭಿಯಾನಕ್ಕೂ ಚಾಲನೆ ನೀಡಲಿದ್ದಾರೆ.
ಸಂಜೆ ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದ ಎಂ.ಕೆ.ಹುಬ್ಬಳ್ಳಿಯಲ್ಲಿ ವೀರ ಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪದ ಬಳಿಯ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ.
ನಂತರ ಬೆಳಗಾವಿ ನಗರದಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಸಭೆಗಳನ್ನು ನಡೆಸಲಿದ್ದಾರೆ.
ಮಂಡ್ಯ ಉಸ್ತುವಾರಿ ಬದಲಾಯಿಸಿದ್ದೇಕೆ? ಬಿಜೆಪಿಯಲ್ಲೇ ಗಂಭೀರ ಚರ್ಚೆ
ಮೊದಲು ಸಂಘ ಪರಿವಾರದ ಹಿರಿಯರ ಜೊತೆ ಸಂವಾದ ನಡೆಸುವರು. ಅದಾದ ಬಳಿಕ ಬೆಳಗಾವಿ ಜಿಲ್ಲೆಯ ಹಿರಿಯ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ನಂತರ ಪಕ್ಷದ ಸಂಘಟನಾತ್ಮಕ ಸಭೆಯಲ್ಲೂ ಭಾಗವಹಿಸುವರು.
ಈ ಸಭೆಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರ ಹಿರಿಯ ನಾಯಕರು ಉಪಸ್ಥಿತರಿರುತ್ತಾರೆ.
Amit Shah, ,visit, Hubballi, Belagavi, upcoming, assembly, election, strategy,