ಬೀದರ್, ಆ.2: ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತವಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಆ.4ರಂದು ಗಜಪಯಣದ ವೇಳೆ ಮಾವುತ/ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ. ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ ಅರ್ಜುನ ಆನೆ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.
1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಆ.4ರಂದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ ಅರ್ಜುನ ಆನೆ ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
- ಅಕ್ಕ ಮತ್ತು ತಮ್ಮನನ್ನು ಕೊಂದು ಸುಟ್ಟು ಹಾಕಿದ ಯುವಕ
- ‘ಆಪರೇಷನ್ ಅಖಾಲ್’ ಮೂಲಕ ಮೂವರು ಉಗ್ರರನ್ನು ಹೊಸಕಿಹಾಕಿದ ಸೇನೆ
- ಪತ್ನಿಯೊಂದಿಗೆ ಮಾತನಾಡಿದ ವ್ಯಕ್ತಿಯನ್ನು ಇರಿದುಕೊಂದ ಲಿವ್ ಇನ್ ಪಾರ್ಟನರ್
- ಆ.10 ರಂದು ನಮ್ಮ ಮೆಟ್ರೋದ ಹಳದಿ ಮಾರ್ಗ ಉದ್ಘಾಟಿಸಿ 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಪ್ರಧಾನಿ ಮೋದಿ
- ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣು