ಬೆಂಗಳೂರು,ಫೆ.4-ಜನ ಸಾಮಾನ್ಯರ ಅನುಕೂಲಕ್ಕಾಗಿ ಜಾರಿಗೆ ತಂದಿದ್ದ ಅಟಲ್ಜೀ ಜನಸ್ನೇಹಿ ಕೇಂದ್ರಗಳಿಗೆ ಬೀಗಿ ಬೀಳುವ ಕಾಲ ಸನ್ನಿಹಿತವಾಗಿದೆ.
ಮಾಜಿ ಪ್ರಧಾನಿ ಅಟಲ್ ಬೀಹಾರಿ ವಾಜಪೇಯಿ ಅವರ ಹೆಸರಿನಲ್ಲಿ ಅಟಲ್ಜೀ ಜನಸ್ನೇಹಿ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಗ್ರಾಮ ಓನ್ ಯೋಜನೆ ಜಾರಿಗೆ ತಂದಿರುವುದರಿಂದ ಅಟಲ್ಜೀ ಕೇಂದ್ರಗಳಿಗೆ ಬೀಗ ಬೀಳುವ ಅಪಾಯ ಎದುರಾಗಿದೆ.
ಗಣರಾಜ್ಯೋತ್ಸವದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಜನರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷೆಯ ಗ್ರಾಮ ಓನ್ ಯೋಜನೆ ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು.
ಇದೀಗ ರಾಜ್ಯದ ಮೂಲೆ ಮೂಲೆಗಳಲ್ಲೂ ಗ್ರಾಮ್ ಓನ್ ಕೇಂದ್ರಗಳು ಆರಂಭವಾಗುತ್ತಿರುವುದರಿಂದ ನಾಡ ಕಚೇರಿಗಳು ಹಾಗೂ ಅಟಲ್ಜೀ ಜನಸ್ನೇಹಿ ಕೇಂದ್ರಗಳನ್ನು ಮುಚ್ಚಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಇನ್ನು ಮುಂದೆ ನಾಡ ಕಚೇರಿಗಳಲ್ಲಿ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಸೂಚಿಸಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಕಳೆದ 14 ವರ್ಷಗಳಿಂದ ನಾಡಕಚೇರಿ ಮತ್ತು ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ಕೆಲಸ ಮಾಡಿಕೊಂಡು ಬರುತ್ತಿರುವ ನೂರಾರು ಮಂದಿ ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಬಂದೋದಗಿದೆ.
ಅಟಲ್ಜೀ ಜನಸ್ನೇಹಿ ಕೇಂದ್ರಗಳಿಗೆ ಬೀಗ ಜಡಿದರೆ ನಮ್ಮ ಬದುಕು ಬೀದಿಗೆ ಬರಲಿದೆ. ನಮ್ಮ ಹೊಟ್ಟೆ ಮೇಲೆ ಹೊಡೆಯಬೇಡಿ ಎಂದು ಅಟಲ್ಜೀ ಕೇಂದ್ರ ನೌಕರರು ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬೆಂಗಳೂರು ನಗರ ಜಿಲ್ಲಾಕಾರಿ ಮಂಜುನಾಥ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
