Sunday, April 28, 2024
Homeಬೆಂಗಳೂರುಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು,ಫೆ.24- ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಕುರಿತು ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.

ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನಿರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ/ಸಿಬ್ಬಂದಿಗಳನ್ನು ವಲಯ ಆಯುಕ್ತರ ಅೀಧಿನದಲ್ಲಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಆಯಾ ವಲಯಗಳಿಗೆ ಬೋರ್ ವೆಲ್‍ಗಳನ್ನು ಕೊರೆಯಲು 131 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಬೋರ್ ವೆಲ್‍ಗಳನ್ನು ಕೊರೆದು ನೀರಿನ ಅಭಾವವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಘಟಕಗಳು ನಿಂತಿವೆ, ಕೂಡಲೆ ಬೋರ್ ವೆಲ್‍ಗಳನ್ನು ಹಾಕಿ ಆರ್‍ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಆರ್‍ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡುವವರೆಗೆ ತಾತ್ಕಾಲಿಕವಾಗಿ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಲಮಂಡಳಿಯ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ರವರು ಮಾತನಾಡಿ, ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿನಿತ್ಯ ಸುಮಾರು 1472 ಎಂ.ಎಲï.ಡಿ ನಿರನ್ನು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿಯಿಂದ ಜುಲೈ 2024 ರವರೆಗೆ ಅಂದಾಜು 9.48 ಟಿಎಂಸಿ ನೀರು ಅವಶ್ಯಕತೆಯಿದೆ ಎಂದು ಹೇಳಿದರು.

ನಗರದಲ್ಲಿ ಜಳಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಹೊಂದಿವೆ. ನಗರದಲ್ಲಿ 10955 ಕೊಳವೆ ಬಾವಿಗಳಲ್ಲಿ 1214 ಕೊಳವೆ ಬಾವಿಗಳು ಬತ್ತಿದ್ದು, 3700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅಂತಹವುಗಳನ್ನು ಫ್ಲಷಿಂಗ್, ರೀಡ್ರಿಲ್ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು. ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ನೀರಿನ ಸರಬರಾಜು ಮಾಡಲು 68 ಟ್ಯಾಂಕರ್‍ಗಳ ಜೊತೆಗೆ 18 ಹೊಸ ಟ್ಯಾಂಕರ್‍ಗಳನ್ನು ಖರೀದಿಸಲು ಮತ್ತು 200 ಖಾಸಗಿ ಟ್ಯಾಂಕರ್ ಗಳನ್ನು ಬಾಡಿಗೆಗೆ ಪಡೆಯಲು ಕ್ರಮವಹಿಸಲಾಗಿದೆ ಎಂದು ಅವರು ಹೇಳಿದರು.

ಸಿಂಟೆಕ್ಸ್ ಟ್ಯಾಂಕ್‍ಗಳ ವ್ಯವಸ್ಥೆ ಮಾಡಿ: ನಗರದ ಆರ್‍ಆರ್ ನಗರ ವಲಯದಲ್ಲಿ ಈಗಾಗಲೇ ಪ್ರಮುಖ ಸ್ಥಳದಲ್ಲಿ ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಅಳವಡಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಎಲ್ಲಾ ವಲಯಗಳಲ್ಲಿಯೂ ಪ್ರಮುಖ ಸ್ಥಳ, ಕೊಳಗೇರಿ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.

110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ಬಿಬಿಎಂಪಿ ವ್ಯಾಪ್ತಿಗೆ ಬರುವ 110 ಹಳ್ಳಿಗಳಲ್ಲಿ ಹೆಚ್ಚು ಸಮಸ್ಯೆ ಇದ್ದು, ಹಳ್ಳಿಗಳಿಗೆ ಹೆಚ್ಚು ಒತ್ತು ನೀಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬೋರ್‍ವೆಲ್‍ಗಳನ್ನು ಕೊರೆಯಬೇಕು. ಜೊತೆಗೆ ನೀರಿನ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಂಡು ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. 110 ಹಳ್ಳಿಗಳಲ್ಲಿ ನೀರಿನ ಅಭಾವವನ್ನು ನೀಗಿಸುವ ಸಲುವಾಗಿ ಜಲಮಂಡಳಿ ಅಧಿಕಾರಿ ಮತ್ತು ಸಿಬ್ಬಂದಿಗಳು ವಲಯ ಆಯುಕ್ತರ ಅೀಧಿನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳು ಹಾಜರಿದ್ದರು.

RELATED ARTICLES

Latest News