Thursday, May 2, 2024
Homeರಾಜ್ಯಬೆಳಗಾವಿಗೆ ರಾಷ್ಟ್ರೀಯ ಮಹಿಳಾ ಆಯೋಗ ತಂಡ ಭೇಟಿ

ಬೆಳಗಾವಿಗೆ ರಾಷ್ಟ್ರೀಯ ಮಹಿಳಾ ಆಯೋಗ ತಂಡ ಭೇಟಿ

ಬೆಂಗಳೂರು,ಡಿ.16- ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಬೆಳಗಾವಿ ಮಹಿಳಾ ವಿವಸ್ತ್ರ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗವು ಮಾಹಿತಿಯನ್ನು ಕಲೆ ಹಾಕಿದೆ. ಇದರ ಬೆನ್ನಲ್ಲೇ ಬಿಜೆಪಿ ಸತ್ಯಶೋಧನಾ ಸಮಿತಿಯು ಕೂಡ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿದೆ. ಮತ್ತೊಂದೆಡೆ ಬಿಜೆಪಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದೆ.

ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗ್‍ಡೊಪ್ ನೇತೃತ್ವದ ತಂಡ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಸಖಿ-1 ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿತು. ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತ, ಜಿಲ್ಲಾ ಆರೋಗ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಆಯೋಗದ ಸದಸ್ಯರನ್ನು ನೋಡುತ್ತಲೇ ಸಂತ್ರಸ್ತೆ ಕಣ್ಣೀರಿಟ್ಟರು. ಅಂದು ಸಕಾಲಕ್ಕೆ ಸರಿಯಾಗಿ ಪೊಲೀಸರು ಬಾರದಿದ್ದರೆ ನನ್ನನ್ನು ಕೊಂದೇ ಬಿಡುತ್ತಿದ್ದರು. ಈಗಲೂ ಅದನ್ನು ನೆನೆಸಿಕೊಂಡರೆ ನನಗೆ ಮೈಜುಮ್ಮೆನ್ನುತ್ತದೆ ಎಂದು ಘಟನೆಯ ಬಗ್ಗೆ ಮಹಿಳೆಯು ದಿಗ್ಭ್ರಾಂತಿ ವ್ಯಕ್ತಪಡಿಸಿದರೆಂದು ತಿಳಿದುಬಂದಿದೆ. ಘಟನೆ ಹೇಗೆ ನಡೆಯಿತು? ಅಂದು ಮನೆಗೆ ಯಾರ್ಯಾರು ಬಂದಿದ್ದರು, ನಿಜವಾದ ಕಾರಣವೇನು? ಇದರ ಹಿಂದೆ ಯಾವುದಾದರೂ ಕಾಣದ ಕೈಗಳ ಕೈವಾಡವಿದೆಯೇ ಎಂಬುದು ಸೇರಿದಂತೆ ಹಲವಾರು ಆಯಾಮಗಳಲ್ಲಿ ಮಹಿಳಾ ಆಯೋಗ ಸಂತ್ರಸ್ತೆಯಿಂದ ಖುದ್ದು ವಿವರಣೆಯನ್ನು ಪಡೆದುಕೊಂಡಿತು.

ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭಕಲ್ಯಾಣ್ ಅಧಿಕಾರ ಸ್ವೀಕಾರ

ಸಂತ್ರಸ್ತೆಯ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೂ ಸಂಬಂಧವಿದೆಯೇ ಎಂಬುದರ ಬಗ್ಗೆಯೂ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಇದಕ್ಕೂ ಮುನ್ನ ದೆಹಲಿಯಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಸಂಸದರ ತಂಡವನ್ನು ಮಾಜಿ ಶಾಸಕ ಸಂಜಯ್ ಪಾಟೀಲ್ ಬರ ಮಾಡಿಕೊಂಡರು. ನಂತರ ಬೆಳಗಾವಿ ಲೋಕಸಭೆ ಸದಸ್ಯೆಮಂಗಳಾ ಅಂಗಡಿಯವರನ್ನು ಭೇಟಿ ಮಾಡಿದರು. ಈ ವೇಳೆ ಮಾಜಿ ಶಾಸಕ ಅನಿಲ್ ಬೆನಕೆ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ನಿಯೋಗ ಭೇಟಿ:
ರಾಷ್ಟ್ರೀಯ ಮಹಿಳಾ ಆಯೋಗ ಭೇಟಿ ಕೊಟ್ಟ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿದ್ದ ಐವರು ಮಹಿಳಾ ಸಂಸದರ ಸತ್ಯ ಶೋಧನಾ ಸಮಿತಿಯ ತಂಡವೂ ಕೂಡ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿದೆ. ಬಿಜೆಪಿ ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಅವರ ತಂಡವು ಆಸ್ಪತ್ರೆ ಮತ್ತು ಮನೆಗೆ ಪ್ರತ್ಯೇಕವಾಗಿ ಭೇಟಿ ಕೊಟ್ಟಿದೆ.

ಕೇಂದ್ರದ ಈ ತಂಡಕ್ಕೆ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಬೆಳಗಾವಿ ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಶ್ಮಾ ಪಾಟೀಲ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಮುಖಂಡರಾದ ಬಸವರಾಜ ಹುಂದ್ರಿ ಹಾಗೂ ಪವನ ಕತ್ತಿ ಅವರು ಕೃತ್ಯದ ಕುರಿತ ಮಾಹಿತಿಗಳನ್ನು ನೀಡಿದ್ದರು. ಮೊದಲು ಆಸ್ಪತ್ರೆಗೆ ಭೇಟಿ ಕೊಟ್ಟ ತಂಡ ಮಹಿಳೆಯನ್ನು ಭೇಟಿ ಮಾಡಿ ಘಟನೆ ಕುರಿತು ಮಾಹಿತಿಯನ್ನು ಕಲೆ ಹಾಕಿದೆ. ನಂತರ ಘಟನೆ ನಡೆದ ವಂಟಮುರಿಗೂ ಭೇಟಿ ನೀಡಿ ಸಂಬಂಧಿಕರಿಂದ ಮಾಹಿತಿಯನ್ನು ಪಡೆದುಕೊಂಡಿದೆ.

ಈ ಸತ್ಯಶೋಧನಾ ಸಮಿತಿಯು ಘಟನೆ ಕುರಿತು ಹಲವರಿಂದ ಹೇಳಿಕೆಗಳನ್ನು ಪಡೆದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ವರದಿಯನ್ನು ಸಲ್ಲಿಸಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಘಟನೆ ಕುರಿತಂತೆ ಸತ್ಯ ಶೋಧನಾ ಸಮಿತಿಯಿಂದ ವಿಡಿಯೋ ಕಾನರೆನ್ಸ್ ಮೂಲಕ ಮಾಹಿತಿ ಪಡೆದುಕೊಂಡರು. ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಪ್ರತಿಭಟನೆ:
ಇನ್ನು ಬಿಜೆಪಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾದ್ಯಂತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿ ಮಹಿಳೆಗೆ ರಕ್ಷಣೆ ಕೊಡಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

ನಗರದ ಮೇಕ್ರಿವೃತ್ತದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಹಾಗು ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಗೃಹಸಚಿವ ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಯಿತು. ಸದಾಶಿವನಗರದಲ್ಲಿರುವ ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರಾದರೂ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡರು.

ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ ಇಬ್ಬರು ಭಾರತೀಯರ ಬಂಧನ

ಡಿಸೆಂಬರ್ 11 ರಂದು ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ನಡೆಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಗಿತ್ತು. ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಹೊರಟಿದ್ದ ಹುಡುಗಿಯೊಂದಿಗೆ ಈ ಮಹಿಳೆಯ ಮಗ ಓಡಿಹೋಗಿದ್ದಕ್ಕಾಗಿ ಇಂತಹ ಕೃತ್ಯ ಎಸಗಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ 8 ಜನರಿಗಾಗಿ ಶೋಧ ನಡೆಯುತ್ತಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ.

RELATED ARTICLES

Latest News