ಬೆಂಗಳೂರು,ಜು.28- ಸುಮಾರು 21 ಜಿಲ್ಲೆ ಹಾಗೂ ಹೊರರಾಜ್ಯಗಳಿಗೆ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಮೇಲ್ಸೇತುವೆ ಮೇಲೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಆ.5 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ ರಸ್ತೆ ಡಾಂಬರೀಕರಣ ಕಾಮಗಾರಿ ಹಮಿಕೊಂಡಿದ್ದು, ಸಾರ್ವಜನಿಕರ ಸುಗಮ ಸಂಚಾರ ದೃಷ್ಟಿಯಿಂದ ಆ.5ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಹಾಗೂ ಶನಿವಾರ ಮತ್ತು ಭಾನುವಾರ ರಾತ್ರಿ 12 ರಿಂದ ಬೆಳಿಗ್ಗೆ 5 ಗಂಟೆವರೆಗೆ ಪೀಣ್ಯ ಇಲಿವೇಟೆಡ್ ಫ್ಲೈ ಓವರ್ ಮೇಲೆ ಬೆಂಗಳೂರು ಕಡೆಗೆ ಬರುವ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ :
ತುಮಕೂರು-ನೆಲಮಂಗಲ ಕಡೆಯಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳು ಕೆನ್ನಮೆಟಲ್ ಸಮೀಪದ ಮೇಲ್ಸೇತುವೆ ಕೆಳಭಾಗದ ಎನ್ಎಚ್-4 ಮತ್ತು ಸರ್ವೀಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಎಸ್ಆರ್ಎಸ್ ಜಂಕ್ಷನ್, ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದು ಎಂದು ಪೀಣ್ಯ ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
