ಬೆಂಗಳೂರು,ಏ.4- ವಾರದ ಹಿಂದೆಯಷ್ಟೇ ನಗರಕ್ಕೆ ಬಂದಿದ್ದ ರಾಜಸ್ಥಾನ ಮೂಲದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.
ರಾಜಸ್ಥಾನದ ದಲಾರಾಮ್ (26) ಕೊಲೆಯಾದ ಯುವಕ. ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿರುವ ಸಂಬಂಧಿಕರ ಮನೆಗೆ 1 ವಾರದ ಹಿಂದೆಯಷ್ಟೇ ರಾಜಸ್ಥಾನ ದಿಂದ ಬಂದಿದ್ದನು.
ರಾತ್ರಿ 12.10 ರ ಸುಮಾರಿನಲ್ಲಿ ಬಳಗೆರೆ ಮುಖ್ಯರಸ್ತೆ ಸ್ಕಂದ ಎಲಿನಾ ಅಪಾರ್ಟ್ಮೆಂಟ್ ರಸ್ತೆಯಲ್ಲಿ ದಲಾರಾಮ್ ಹೋಗುತ್ತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದಿದ್ದಾರೆ.
ದಲಾರಾಮ್ ತಪ್ಪಿಸಿಕೊಳ್ಳಲು ಸ್ವಲ್ಪ ದೂರ ಓಡಿದ್ದು ಸಾಧ್ಯವಾಗದೇ ಫುಟ್ಪಾತ್ನಲ್ಲಿ ಕುಸಿದು ಬಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಯುವಕನನ್ನು ಯಾರು, ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆಂಬುವುದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
