ಕಲಬುರಗಿ,ಮಾ.15- ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಿದ ಬಳಿಕವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾಧಿಕಾರಿ ಸೂಚನೆಗೂ ಮುನ್ನ ಬಿಜೆಪಿ ತನ್ನ ಪಟ್ಟಿಯನ್ನು ಪ್ರಕಟಿಸುವುದಿಲ್ಲ. ಈಗಾಗಲೇ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಆಂತರಿಕ ಹಾಗೂ ಬಾಹ್ಯ ಸಮೀಕ್ಷೆ ಆರಂಭವಾಗಿದೆ ಎಂದರು.
ಆಂತರಿಕ ಸಮೀಕ್ಷೆಗಾಗಿ ರಾಷ್ಟ್ರೀಯ ನಾಯಕರನ್ನು ಒಳಗೊಂಡ 10 ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ ರಾಷ್ಟ್ರೀಯ ನಾಯಕರು ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆಯಲಿದ್ದಾರೆ. ಬಾಹ್ಯ ಸಮೀಕ್ಷೆಗಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ಅಂತಿಮವಾಗಿ ಬಿಜೆಪಿ ಸಂಸದೀಯ ಮಂಡಳಿ ಪಟ್ಟಿ ಪ್ರಕಟಿಸಲಿದೆ ಎಂದು ತಿಳಿಸಿದರು.
ಚುನಾವಣೆಗೆ ಸ್ರ್ಪಧಿಸಲು ಯಾವುದೇ ವಯಸ್ಸಿನ ಮಿತಿಯನ್ನು ಪಕ್ಷ ನಿಗದಿಪಡಿಸಿಲ್ಲ, 75 ವರ್ಷ ಮೇಲ್ಪಟ್ಟವರು ಸ್ರ್ಪಧಿಸುವಂತಿಲ್ಲ ಎಂಬ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಅವರು ರವಿ ತಿರುಗೇಟು ನೀಡಿದರು.
ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದನ್ನು ಸಮರ್ಥಿಸಿಕೊಂಡ ಸಿ.ಟಿ.ರವಿ, ನರೇಂದ್ರಮೋದಿ ಸೇರಿದಂತೆ ಹಲವು ನಾಯಕರು ರಾಜ್ಯಕ್ಕೆ ಹೆಚ್ಚು ಭೇಟಿ ನೀಡುತ್ತಿರುವುದರಿಂದ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಬರುತ್ತವೆ ಎಂದಿದ್ದಾರೆ. ವಿದೇಶಿ ನೆಲದಲ್ಲಿ ರಾಹುಲ್ಗಾಂಧಿ ಭಾರತದ ಪ್ರಜಪ್ರಭುತ್ವದ ಮಾನಹರಾಜು ಹಾಕಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
BJP, candidates, released, assembly, elections, CT Ravi,