ಬೆಂಗಳೂರು, ಮಾ.13- ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಅದಾಯದ (ರೆನ್ ಸರ್ ಪಾಸ್) ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ರಾಜ್ಯದ ಸಾಲದ ಕುರಿತು ಆರೋಪ ಪ್ರತ್ಯಾರೋಪಗಳು ಮಾತಿನ ಚಕಮಕಿ ನಡೆಯಿತು.
ವಿರೋಧಪಕ್ಷದ ನಾಯಕ ಆರ್.ಅಶೋಕ್, 4.09 ಲಕ್ಷ ಕೋಟಿ ಗಾತ್ರದ ಬಜೆಟ್ನಲ್ಲಿ 3.11 ಲಕ್ಷ ಕೋಟಿ ರೂ. ರಾಜಸ್ವ ವೆಚ್ಚವನ್ನು ನಿಗದಿ ಮಾಡಲಾಗಿದೆ. ಇದು ಶೇ.76 ರಷ್ಟಿದ್ದರೆ ಬಂಡವಾಳ ವೆಚ್ಚಕ್ಕೆ ಕೇವಲ 17.4 ರಷ್ಟು ಮೀಸಲಿಡಲಾಗಿದೆ. 11.36 ಸಾವಿರ ಕೋಟಿ ಬಂಡವಾಳ ವೆಚ್ಚದಲ್ಲಿ ಯಾವ ಆಸ್ತಿ ಸೃಜನೆ ಮಾಡಲು ಸಾಧ್ಯ, ಸಾಲ ಮರುಪಾವತಿಗಾಗಿ 26,470 ಕೋಟಿ ರೂ. ಮೀಸಲಿಡಲಾಗಿದೆ.
19 ಸಾವಿರ ಕೋಟಿ ರಾಜಸ್ವ ಕೊರತೆಯಿದೆ. ರಾಜ್ಯದ ಒಟ್ಟು ಸಾಲ 7.64 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ವಿವರಿಸಿದರು. 2021-22ನೇ ಸಾಲಿನಲ್ಲಿ ಕೋವಿಡ್ ನಂತಹ ಸಂಕಷ್ಟ ಸಂದರ್ಭವಲ್ಲೂ ರಾಜ್ಯಸರ್ಕಾರ 80,641 ಕೋಟಿ ರೂ. ಸಾಲ ಮಾಡಿತ್ತು. 2022-23ನೇ ಸಾಲಿನಲ್ಲಿ 44,549 ಕೋಟಿ ರೂ.. 2023-24ನೇ ಸಾಲಿನಲ್ಲಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ 90,280 ಕೋಟಿ, ಕಳೆದ ಬಜೆಟ್ನಲ್ಲಿ 1.07 ಕೋಟಿ ಮುಂದಿನ ವರ್ಷಕ್ಕೆ 1:10 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ.
ಸಾಲ ಪಡೆದು ಆಸ್ತಿ ಸೃಷ್ಟಿಸಬೇಕೆಂದು 2017 ರಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಆನಂತರ ಸಿದ್ದರಾಮಯ್ಯ ನವರೂ ಡಲ್ ಆಗಿದ್ದಾರೆ. ಅವರ ಬಜೆಟ್ ಕೂಡ ಡಲ್ ಆಗಿದೆ. ಈಗ ಸಾಲ ಮಾಡಿ ಅವರ ರಾಜಕೀಯ ಪ್ರಣಾಳಿಕೆಯ ಈಈಡೇರಿಕೆಗೆ ಖರ್ಚು ಮಾಡುತ್ತಿದ್ದಾರೆ. ಎಲ್ಲಾ ಪೀ ಫ್ರೀ ಕೊಡಲು ಸಾಲದ ಹಣ ದುರ್ಬಳಕೆಯಾಗುತ್ತಿದ್ದು ಇದು ಮೋಸ ಮತ್ತು ಅನ್ಯಾಯ ಎಂದು ಆರೋಪಿಸಿದರು. ಅಭಿವೃದ್ಧಿ ಎಂಬುದು ಶೂನ್ಯವಾಗಿದೆ ಎಂದು ಆರ್.ಅಶೋಕ್ ಹೇಳುತ್ತಿದ್ದಂತೆ, ಸಚಿವ ಚಲುವರಾಯಸ್ವಾಮಿ ಪ್ರತಿ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ದೊರೆಯುತ್ತಿದೆ. ಇದು ಅಭಿವೃದ್ಧಿಯಲ್ಲವೇ? ಎಂದು ಪ್ರಶ್ನಿಸಿದರು.
ಸಾಲದ ಮೊತ್ತವನ್ನೂ ಕಳೆದ ವರ್ಷ 1.81 ಲಕ್ಷ ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿತ್ತು. ಆದರೆ ಅಷ್ಟು ಸಂಗ್ರಹವಾಗಿಲ್ಲ, ಮುಂದಿನ ವರ್ಷದಲ್ಲಿ 2.8 ಲಕ್ಷ ಕೋಟಿ ರೂ. ಆದಾಯದ ಗುರಿ ನಿಗದಿಪಡಿಸಲಾಗಿದೆ. ಅಭಿವೃದ್ಧಿ ಗುರಿಗಿಂತ ಅಬಕಾರಿ ಗುರಿ ಹೆಚ್ಚಾಗಿದೆ. ಜನರನ್ನು ಮದ್ಯವಾನ ಪ್ರಿಯರನ್ನಾಗಿ ಮಾಡಲಾಗುತ್ತಿದೆ. 16 ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ತುಂಬಾ ದುರ್ಬಲರಾಗಿದ್ದಾರೆ. ಮರ ಮುಪ್ಪಾದರೂ ಹುಳಿ ಮುಪ್ಪೇ? ಎಂಬ ಗಾದೆ ಮಾತು ಸಿದ್ದರಾಮಯ್ಯ ನವರಿಗೆ ಅನ್ವಯವಾಗುವುದಿಲ್ಲ ಎಂದು ಲೇವಡಿ ಮಾಡಿದರು.
ಮಧ್ಯ ಪ್ರವೇಶಿಸಿದ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ ಎಂಬುದನ್ನೂ ಹೇಳಬೇಕು. ಸಾಲದ ಹಣವನ್ನು ಆಸ್ತಿ ಸೃಜನೆಗೆ ಖರ್ಚು ಮಾಡಬೇಕು ಎಂಬ ಹೇಳಿಕೆಗೆ ಈಗಲೂ ಬದ್ರನಿದ್ದೇನೆ. ನಮ್ಮ ಸರ್ಕಾರ ವಿತ್ತೀಯ ಹೊಣೆಗಾರಿಕೆ ನಿಯಮಾವಳಿ ಅನುಸಾರವೇ ನಡೆದುಕೊಳ್ಳುತ್ತಿದೆ. ರೆವಿನ್ಯೂ ಸರ್ಪ್ಲಸ್ ಒಂದನ್ನು ಹೊರತುಪಡಿಸಿ ಉಳಿದಂತೆ ವಿತ್ತೀಯ ಕೊರತೆ ಮತ್ತು ಸಾಲದ ಪ್ರಮಾಣ ಎರಡೂ ನಿಯಮಾವಳಿಗಳ ಅನುಸಾರದಲ್ಲಿಯೇ ಇವೆ ಎಂದರು
ಕಳೆದ ವರ್ಷ 27 ಸಾವಿರ ಕೋಟಿ ವಿತ್ತೀಯ ಕೊರತೆ ಇತ್ತು. ಈ ವರ್ಷ 19,262 ಕೋಟಿ ರೂ.ಗೆ ಇಳಿಸಲಾಗಿದೆ. ಮುಂದಿನ ವರ್ಷ ಹೆಚ್ಚುವರಿ ಆದಾಯದ ಬಜೆಟ್ ಮಂಡನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಕೇಂದ್ರದಲ್ಲಿ 2014-15ರವರೆಗೂ 53:11 ಲಕ್ಷ ಕೋಟಿ ಮಾತ್ರ ಸಾಲವಿತ್ತು. ಮೋದಿಯವರು ಪ್ರಧಾನಿಯಾದ ಬಳಿಕ ಅದು ಶೇ.56 ರಷ್ಟು ಹೆಚ್ಚಾಗಿದೆ. 2.1 ಲಕ್ಷ ಕೋಟಿಯನ್ನು 2025-26ನೇ ಸಾಲಿನಲ್ಲಿ ಸಾಲ ಪಡೆಯಲಾಗುತ್ತಿದೆ. ದೇಶದ ಒಟ್ಟು ಸಾಲ 201 ಲಕ್ಷ ಕೋಟಿ ರೂ.ಗಳು ಎಂದು ವಿವರಿಸಿದರು.
ಈ ವೇಳೆ ಬಿಜೆಪಿಯ ಅರಗ ಜ್ಞಾನೇಂದ್ರ ಕೇಂದ್ರದ ಬಂಡವಾಳ ವೆಚ್ಚ ಎಷ್ಟು ಎಂಬುದನ್ನು ಹೇಳಿ ಎಂದಾಗ ಸುನೀಲ್ ಕುಮಾರ್ ಮತ್ತು ಭರತರೆಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದು ರಾಜ್ಯದ ಬಜೆಟ್, ಕೇಂದ್ರದ ವಿಚಾರಗಳು ಇಲ್ಲಿ ಚರ್ಚೆಯಾಗುವುದು ಬೇಡ, ಸಂಸತ್ ಅಧಿವೇಶನ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗಲಿ ಎಂದು ಬಿ.ವೈ.ವಿಜಯೇಂದ್ರ, ಅಶ್ವತ್ಥನಾರಾಯ ಮತ್ತಿತರರು ತಿರುಗೇಟು ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸತ್ಯ ಕಹಿಯಾಗಿರುತ್ತದೆ. ಅಶ್ವತ್ಥನಾರಾಯಣ ಹಾಗೂ ಮತ್ತಿತರರು ಕೈ ಬಾಯಿ ತಿರುಗಿಸಿ ಬಂದ ಧ್ವನಿಯಲ್ಲಿ ಮಾತನಾಡಿದರೆ ನಾವು ಬಗ್ಗುವುದಿಲ್ಲ. ನಿಮ್ಮ ಭಂಡತನ ನಮ್ಮ ಮುಂದೆ ನಡೆಯುವುದಿಲ್ಲ ಎಂದು ಪ್ರತಿ ಸವಾಲು ಹಾಕಿದರು.
ನಮ್ಮ ಸರ್ಕಾರ ಬಂಡವಾಳ ವೆಚ್ಚವನ್ನು 83 ಸಾವಿರ ಕೋಟಿ ರೂ.ಗೆ ಹೆಚ್ಚಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ವಿಚಾರಗಳನ್ನು ಚರ್ಚೆ ಮಾಡಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡರು.