ಬೆಂಗಳೂರು,ಸೆ.27- ಪೂರ್ವ ತಯಾರಿ ಹಾಗೂ ಸೂಕ್ತ ತರಬೇತಿ ಅಗತ್ಯ ಇರುವುದರಿಂದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯನ್ನು ಕೆಲ ದಿನಗಳ ಮಟ್ಟಿಗೆ ಮುಂದೂಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಸುದೀರ್ಘ ಪತ್ರ ಬರೆದಿರುವ ಸಿ.ಟಿ.ರವಿ, ರಾಜ್ಯಾದ್ಯಂತ ನಡೆಸುತ್ತಿರುವ ಸಮೀಕ್ಷೆ ಸಾಕಷ್ಟು ಗೊಂದಲದಿಂದ ಕೂಡಿದೆ. ಸಮೀಕ್ಷೆದಾರರಿಗೆ ಸೂಕ್ತವಾದ ತರಬೇತಿ, ಪೂರ್ವ ಸಿದ್ದತೆ ಇಲ್ಲದೇ ಇರುವುದರಿಂದ ಗೊಂದಲಕ್ಕೆ ಒಳಗಾಗಿದ್ದಾರೆ. ಹೀಗಾಗಿ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.
ಗಣತಿದಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅನೇಕ ಕಡೆ ನೆಟ್ವರ್ಕ್ ಸಿಗದೆ ಗೊಂದಲಕ್ಕೆ ಸಿಲುಕಿದ್ದಾರೆ. ಅಲ್ಲದೆ ಅವರು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪರಿಹರಿಸುವ ಬದಲು ನೀವು ಅವರಿಗೆ ಬೆದರಿಕೆ ಹಾಕುತ್ತಿದ್ದೀರಿ. ಇದರಿಂದ ನಿಮ ಕನಸಿನ ಕೂಸು ಬಡವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯು ಈಗಾಗಲೇ ಆರಂಭವಾಗಿದ್ದು, ಸಮೀಕ್ಷೆಯ ಸಂದರ್ಭದಲ್ಲಿ, ಈಗಾಗಲೇ ಹೆಚ್ಚುವರಿ ಜವಾಬ್ದಾರಿಗಳ ಹೊರೆಯಿಂದ ಬಳಲಿರುವ ಶಿಕ್ಷಕರು, ಇನ್ನಷ್ಟು ತೀವ್ರ ಸವಾಲುಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ.
ಕೆಲವೆಡೆ ಗಣತಿದಾರರಿಗೆ ಸ್ಥಳ ನಿಯುಕ್ತಿ ಸೇರಿದಂತೆ ಸಮೀಕ್ಷೆಯ ಮಾಹಿತಿ ಸಂಗ್ರಹಿಸಲು ನಿಗದಿಪಡಿಸಿರುವ ಅಪ್ಲಿಕೇಷನ್ ಸರಿಯಾಗಿ ಕಾರ್ಯ ನಿರ್ವಹಿಸದಿರುವುದು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ನೆಟ್ವರ್ಕ್ ಸರಿಯಾಗಿ ಲಭ್ಯವಾಗದೆ ಇರುವುದರಿಂದ ಗಣತಿದಾರ ಶಿಕ್ಷಕರು ಸಮಸ್ಯೆಗೀಡಾಗಿದ್ದಾರೆ.
ಸಮೀಕ್ಷೆಗೆ ಸರಿಯಾದ ಪೂರ್ವ ತಯಾರಿ. ಯೋಜನೆ ಮತ್ತು ತಾಂತ್ರಿಕ ವ್ಯವಸ್ಥೆ ರೂಪಿಸುವಲ್ಲಿ ವಿಫಲವಾಗಿರುವ ಶಂಕೆ ಮೂಡುತ್ತಿದೆ. ಪ್ರಾಯೋಗಿಕವಾಗಿ ಟ್ರಯಲ್ ನಡೆಸಿ, ಅದರ ಅನುಭವದ ಮೇಲೆ ಸಂಪೂರ್ಣ ಸಮೀಕ್ಷಾ ಕಾರ್ಯವನ್ನು ವಿಸ್ತರಿಸಬೇಕಾಗಿತ್ತು. ಆದರೆ ಇಲ್ಲಿ ಇದ್ಯಾವುದನ್ನೂ ಮಾಡದೆ ಇರೋದು ಕಂಡುಬಂದಿದೆ. ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಎದುರಿಸುತ್ತಿರುವ ಸವಾಲುಗಳು ತೀವ್ರ ಗಂಭೀರವಾಗಿದ್ದು , ಈ ಸವಾಲುಗಳನ್ನು ಬಗೆಹರಿಸಿ ಎಂದು ಕೋರಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಕಾರ್ಯನಿರ್ವಹಣೆಯ ಪ್ರಕ್ರಿಯೆಯಲ್ಲಿ ಹಲವಾರು ಗಂಭೀರ ಸವಾಲುಗಳು ಎದುರಾಗುತ್ತಿವೆ. ಈ ಸಮೀಕ್ಷೆಯನ್ನು ನಿರ್ವಹಿಸುತ್ತಿರುವ ಶಿಕ್ಷಕ ಗಣತಿದಾರರು ತಾಂತ್ರಿಕ ಹಾಗೂ ಪ್ರಾಯೋಗಿಕ ತೊಂದರೆಗಳಿಂದಾಗಿ ಗೊಂದಲಕ್ಕೀಡಾಗಿದ್ದಾರೆ. ಸಮೀಕ್ಷೆಯ ಸಮರ್ಪಕ ಪೂರ್ವತಯಾರಿ ಹಾಗೂ ತಾಂತ್ರಿಕ ಸೌಲಭ್ಯಗಳ ಕೊರತೆಯಿಂದ, ನಿರೀಕ್ಷಿತ ರೀತಿಯಲ್ಲಿ ಕಾರ್ಯ ಸಾಗುತ್ತಿಲ್ಲ ಎಂದು ಹೇಳಿದ್ದಾರೆ.
ಸಮೀಕ್ಷೆಯಲ್ಲಿ ಮನೆಗಳ ನಿಖರವಾದ ಸರಣಿ ಜೋಡಣೆ ಮಾಡಲಾಗದಿರುವುದು ಗಣತಿದಾರರಿಗೆ ಹೆಚ್ಚಿನ ತೊಂದರೆ ಉಂಟುಮಾಡುತ್ತಿದೆ. ಕೆಲವೊಮೆ ಒಂದೇ ಮನೆಯನ್ನು ಎರಡು ಬಾರಿ ದಾಖಲು ಮಾಡುವ ಪರಿಸ್ಥಿತಿಯೂ ಎದುರಾಗುತ್ತಿದೆ ಮತ್ತು ಕೆಲವು ಮನೆಗಳು ತಪ್ಪಿಹೋಗುತ್ತಿರುವುದು ಕಂಡುಬಂದಿದೆ.ಮನೆ ಗುರುತಿಸಲು ನೀಡಲಾಗಿರುವ ಯು.ಎಚ್.ಐ.ಡಿ ಸಂಖ್ಯೆಯ ಮೂಲಕ ಮಾಹಿತಿ ಹುಡುಕುವಲ್ಲಿ ತಾಂತ್ರಿಕ ದೋಷಗಳು ಕಂಡುಬರುತ್ತಿವೆ. ಇದು ಗಣತಿದಾರರ ಸಮಯ ಮತ್ತು ಶ್ರಮವನ್ನು ವ್ಯರ್ಥಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.
ಸಮೀಕ್ಷೆಯನ್ನು ಸಂಪೂರ್ಣವಾಗಿ ಆನ್ಲೈನ್ ವ್ಯವಸ್ಥೆಗೆ ಅವಲಂಬಿಸಿರುವುದರಿಂದ, ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್ವರ್ಕ್ ಸೌಲಭ್ಯ ಕೊರತೆ ತೀವ್ರ ಸಮಸ್ಯೆಯಾಗಿದೆ. ಅನೇಕ ಸಂದರ್ಭಗಳಲ್ಲಿ ಸಮೀಕ್ಷೆಯ ಕೆಲಸ ಮಧ್ಯದಲ್ಲೇ ನಿಲ್ಲುತ್ತಿದೆ. ಗಣತಿದಾರರ ಸ್ಥಳದಿಂದ ದೂರದ ಪ್ರದೇಶಗಳಲ್ಲಿ ಸಮೀಕ್ಷೆ ಗಣತಿದಾರರ ಕೆಲಸವನ್ನು ಅವರ ಕಾರ್ಯಸ್ಥಳಕ್ಕಿಂತ ದೂರದ ಪ್ರದೇಶಗಳಲ್ಲಿ ಹಂಚಿರುವುದರಿಂದ ಸಂಚಾರದಲ್ಲಿ ಸಮಯ ಮತ್ತು ಶ್ರಮ ವ್ಯರ್ಥವಾಗುತ್ತಿದೆ., ಸಮೀಕ್ಷೆಗೆ ಸಂಬಂಧಿಸಿದ ಮನೆಗಳ ವಿಳಾಸ ಪಟ್ಟಿ ನೀಡದಿರುವುದು, ಹಾಗೂ ಸದಸ್ಯರನ್ನು ಸೇರಿಸುವುದು ಅಥವಾ ತೆಗೆದುಹಾಕುವ ಆಯ್ಕೆಯ ಕೊರತೆಯಿಂದ ಗೊಂದಲ ಹೆಚ್ಚಾಗಿದೆ.
ಒಂದೇ ದಿನ ಹಲವು ಗಂಟೆಗಳ ಕಾಲ ಮೊಬೈಲ್ ಬಳಸಿ ಮಾಹಿತಿಯನ್ನು ದಾಖಲಿಸುವುದರಿಂದ ಶಿಕ್ಷಕರು ಕಣ್ಣಿನ ತೊಂದರೆ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ದೈಹಿಕ ನ್ಯೂನ್ಯತೆ ಹೊಂದಿರುವವರು, ಅನಾರೋಗ್ಯ ಪೀಡಿತರು ಹಾಗೂ ವಯೋವೃದ್ಧ ಶಿಕ್ಷಕರಿಗೆ ಈ ಕೆಲಸದಲ್ಲಿ ಪಾಲ್ಗೊಳ್ಳುವುದು ಕಷ್ಟಕರವಾಗಿದೆ. ಒಬ್ಬಂಟಿ ಮಹಿಳಾ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆ ಹಾಗೂ ಸಾಮಾಜಿಕ ಮುಜುಗರದ ಸಮಸ್ಯೆಗಳು ಎದುರಾಗುತ್ತಿವೆ. ಕೆಲ ಶಿಕ್ಷಕರಿಗೆ ಮೊಬೈಲ್ ಹಾಗೂ ತಾಂತ್ರಿಕ ಉಪಕರಣಗಳ ಬಳಕೆಯಲ್ಲಿನ ಪರಿಣತಿ ಕೊರತೆಯಿಂದ ಸಮೀಕ್ಷಾ ಕಾರ್ಯ ಇನ್ನಷ್ಟು ಕಷ್ಟಕರವಾಗಿದೆ ಎಂದು ಗಮನ ಸೆಳೆದಿದ್ದಾರೆ.