ಬೆಂಗಳೂರು,ಜೂ.18- ನಂದಿಬೆಟ್ಟ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಿದ್ದ ಸಚಿವ ಸಂಪುಟ ಸಭೆ ರದ್ದುಗೊಳಿಸಲಾಗಿದ್ದು, ಬೆಂಗಳೂರಿನ ವಿಧಾನಸೌಧದಲ್ಲೇ 13ನೇ ಸಭೆ ನಡೆಯಲಿದೆ.
ಕಳೆದ ತಿಂಗಳು ನಂದಿ ಬೆಟ್ಟದ ಸಚಿವ ಸಂಪುಟದಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದಕ್ಕಾಗಿ ಸಾಕಷ್ಟು ತಯಾರಿಗಳು ನಡೆದಿದ್ದವು.
ನಂದಿಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಎತ್ತಿನಹೊಳೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತ್ಯೇಕ ಸಭೆಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯನ್ನು ಮಹತ್ವದ ಘೋಷಣೆಗಳಾಗಬೇಕು ಎಂಬ ಪೂರ್ವ ತಯಾರಿಗಳಾಗಿದ್ದವು.
ಎಲ್ಲದಕ್ಕಿಂತಲೂ ಮುಖ್ಯವಾಗಿ ನಂದಿಬೆಟ್ಟದ ಸಭೆಯಲ್ಲಿ ಜಾತಿ ಜನಗಣತಿ ವರದಿ ಅನುಷ್ಠಾನದ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ ಇದಕ್ಕೆ ಸಂಪುಟದಲ್ಲೇ ಭಾರೀ ವಿರೋಧ ವ್ಯಕ್ತವಾಗಿತ್ತು. ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಜಾತಿಗಣತಿ ವರದಿಯನ್ನು ಅನುಷ್ಠಾನಕ್ಕೆ ತರದಂತೆ ಬ್ರೇಕ್ ಹಾಕಿತ್ತು. ಹೀಗಾಗಿ ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆ ಬೆಂಗಳೂರಿಗೆ ಸ್ಥಳಾಂತರಗೊಂಡಿದೆ.
ಕಳೆದ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ 2015ರಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಬದಿಗಿರಿಸಿ ಹೊಸದಾಗಿ ಸಮೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗ ನಂದಿಬೆಟ್ಟದ ಸಭೆ ಬೆಂಗಳೂರಿಗೆ ಸ್ಥಳಾಂತರಗೊಂಡಿದೆ.