ಮಂಗಳೂರು,ಮಾ.16-ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಇಲ್ಲಿನ ಸಿಸಿಬಿ ಪೊಲೀಸರು ಭೇದಿಸಿದ್ದು ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಸುಮಾರು 37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರ ಮೌಲ್ಯ 74 ಕೋಟಿ ರೂ. ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಬಾ ಫಾಂಟಾ(31) ಹಾಗೂ ಅಬಿಗೈಲ್ ಅಡೋನಿಸ್ (30)ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು, ಕಳೆದ 6 ತಿಂಗಳಿನಿಂದ ಈ ಬೃಹತ್ ಕಾರ್ಯಾಚರಣೆ ನಡೆಯುತ್ತಿತ್ತು. ರಾಜ್ಯದ ಅತ್ಯಂತ ದೊಡ್ಡ ಡ್ರಗ್್ಸಜಾಲ ಇದಾಗಿದೆ ಎಂದು ವಿವರಿಸಿದರು.
ನಮ ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. 6 ತಿಂಗಳ ಹಿಂದೆ ಮಂಗಳೂರಿನ ಪಂಪ್ ವೆಲ್ ಬಳಿ ಲಾಡ್ಜ್ ನಲ್ಲಿ ಹೈದರ್ ಅಲಿ ಎಂಬವನನ್ನು ಬಂಧಿಸಿದ್ದೆವು. ಆತನಿಂದ 15 ಗ್ರಾಂ ಡ್ರಗ್ ವಶಪಡಿಸಿಕೊಳ್ಳಲಾಗಿತ್ತು. ಆತನ ವಿಚಾರಣೆ ವೇಳೆ ಆತನಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ಬಂಧನಕ್ಕೆ ಸಿಸಿಬಿ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಲಾಗಿತ್ತು, ಕಳೆದ ಆರು ತಿಂಗಳಿನಿಂದ ಅವರು ಕಾರ್ಯಾಚರಣೆ ಮಾಡುತ್ತಿದ್ದರು ಎಂದು ತಿಳಿಸಿದರು.
ಈ ನಡುವೆ ಬೆಂಗಳೂರಿನಲ್ಲಿ ನೆಲೆಸಿದ್ದ ನೈಜೀರಿಯಾ ಪ್ರಜೆ ಪೀಟರ್ನನ್ನು ಬಂಧಿಸಿದ್ದೆವು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದೆವು. ಆತನ ವಿಚಾರಣೆ ನಂತರ ಮತ್ತೆ ಕಾರ್ಯಾಚರಣೆ ಮಾಡಿ ಈ ಇಬ್ಬರನ್ನು ಬಂಧಿಸಿದ್ದೇವೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದಿದ್ದರು. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ಆಯುಕ್ತರು ತಿಳಿಸಿದ್ದಾರೆ.
ಅವರಿಂದ 75 ಕೋಟಿ ರೂ. ಮೌಲ್ಯದ 37.878 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದೇವೆ. 4 ಮೊಬೈಲ್ ಫೋನ್, 2 ಪಾಸ್ ಪೋರ್ಟ್, ಟ್ರಾಲಿ ಬ್ಯಾಗ್, 18,460 ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ವಿಸ್ತೃತ ತನಿಖೆ ಜಾಡು ಹಿಡಿದಾಗ ವಿಮಾನದಲ್ಲಿ ಮಾದಕ ವಸ್ತು ಬರುವುದು ತಿಳಿಯಿತು. ಬಂಧಿತ ಮಹಿಳೆಯರು ದೆಹಲಿಯಿಂದ ಬೆಂಗಳೂರು ಹಾಗೂ ಇತರ ಕಡೆಗಳಿಗೆ ಮಾದಕ ವಸ್ತು ಸಾಗಾಟ ಮಾಡಿ, ನೈಜೀರಿಯನ್ ಪ್ರಜೆಗಳಿಗೆ ಹಾಗೂ ಇತರ ಜನರಿಗೆ ಮಾರಾಟ ಮಾಡಿಕೊಂಡು ಹಣವನ್ನು ಸಂಪಾದಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದರು ಎಂದು ಹೇಳಿದರು. ಈ ಜಾಲದಲ್ಲಿ ವಿಮಾನ ನಿಲ್ದಾಣ ಅಧಿಕಾರಿಗಳು ಕೂಡ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಎರಡು ದಿನಗಳ ಹಿಂದೆ ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂತಾರಾಜ್ಯ ಖದೀಮರನ್ನು ವಶಕ್ಕೆ ಪಡೆದು 3 ಪಿಸ್ತೂಲ್, 6 ಸಜೀವ ಮದ್ದುಗುಂಡು, ಕಾರುಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೇರಳ ರಾಜ್ಯದ, ಕಾಸರಗೋಡು ಜಿಲ್ಲೆ , ಮಂಜೇಶ್ವರದ ಕಡಂಬಾರದ ನಿವಾಸಿ ಅಬ್ದುಲ್ ಫೈಜಲ್ ಅಲಿಯಾಸ್ ಫೈಜು(26)ನನ್ನು ಬಂಧಿಸಲಾಗಿದೆ. ಈತ ಡ್ರಗ್್ಸ ಮಾಫಿಯಾದ ಕಿಂಗ್ ಪಿನ್. ಈತ ತಲೆ ಮರೆಸಿಕೊಂಡಿದ್ದ ಎಂದು ತಿಳಿಸಿದರು.
ಈತನಿಂದ 1 ಪಿಸ್ತೂಲ್, 1 ಸಜೀವ ಮದ್ದುಗುಂಡು ಹಾಗೂ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣಗಳು ದಾಖಲಾಗಿರುತ್ತವೆ.
ಪತ್ರಿಕಾಗೋಷ್ಠಿಯಲ್ಲಿ ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್, ಕೆ ರವಿಶಂಕರ್, ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ, ಪೊಲೀಸ್ ಇನ್ಸ್ಪೆಕ್ಟರ್ ರಫೀಕ್ ಕೆ.ಎಂ., ಪಿಎಸ್ಐ ಸುದೀಪ್ ಎಂ.ವಿ. ಶರಣಪ್ಪ ಭಂಡಾ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.