Sunday, June 1, 2025
Homeರಾಜ್ಯವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ನೋಡಿಕೊಳ್ಳಲು ಸುತ್ತೋಲೆ

ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ನೋಡಿಕೊಳ್ಳಲು ಸುತ್ತೋಲೆ

Circular to prevent spread of corona among students

ಬೆಂಗಳೂರು, ಮೇ 31- ಬೇಸಿಗೆ ರಜೆ ಮುಗಿದು ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲೇ ಮಹಾಮಾರಿ ಕೊರೊನಾ ಕಾಣಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ಇಡುವಂತೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಪರಿಸ್ಥಿತಿ ಪರಿಶೀಲನಾ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.
ಆದೇಶದಲ್ಲಿ ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿಯಂತಹ ರೋಗ ಲಕ್ಷಣಗಳು ಕಂಡುಬಂದರೆ ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಜ್ವರ, ನೆಗಡಿ ಕಡಿಮೆಯಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಒಂದು ವೇಳೆ ಶಾಲೆಗೆ ಬಂದ ಮಕ್ಕಳಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ ಕೂಡಲೇ ಪೋಷಕರಿಗೆ ಮಾಹಿತಿ ತಿಳಿಸಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸಬೇಕು.

ಅದೇ ರೀತಿ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆಯೂ ಸೂಚನೆ ನೀಡಲಾಗಿದೆ.

ಯಾವುದೇ ಸೋಂಕು ಹರಡದಂತೆ ನೋಡಿಕೊಳ್ಳಲು ಎಲ್ಲರೂ ಆಧ್ಯತೆ ನೀಡಬೇಕು. ಒಂದು ವೇಳೆ ಸೋಂಕು ಲಕ್ಷಣಗಳು ಕಾಣಿಸಿಕೊಂಡರೆ ಕೈಗಳ ಸ್ವಚ್ಚತೆಗೆ ಗಮನ ಕೊಡುವುದರ ಜೊತೆಗೆ ಇನ್ನಿತರ ಕೊರೊನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಶಾಲಾ ಮಕ್ಕಳ ಆರೋಗ್ಯದ ಕಡೆಯೂ ಗಮನ ಹರಿಸುವ ಮೂಲಕ ಮಹಾಮಾರಿ ಕೊರೊನಾ ಹರಡದಂತೆ ಎಚ್ಚರಿಕೆ ವಹಿಸುವಂತೆಯೂ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

RELATED ARTICLES

Latest News