ನವದೆಹಲಿ,ಜೂ.10- ಹೈಕಮಾಂಡ್ ಬುಲಾವ್ ಮೇರೆಗೆ ದಿಢೀರ್ ದೆಹಲಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘ ವಿವರಣೆ ನೀಡಿದ್ದಲ್ಲದೆ ವಿಧಾನಪರಿಷತ್ ಸದಸ್ಯರ ನೇಮಕಾತಿ ಹಾಗೂ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ದೆಹಲಿ ಭೇಟಿ ಹಿನ್ನೆಲೆ ಹಾಗೂ ಹೈಕೋರ್ಟ್ನಲ್ಲಿ ಇಂದು ಕಾಲ್ತುಳಿತ ಪ್ರಕರಣದ ವಿಚಾರಣೆ ನಡೆಯುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನಲ್ಲಿ ತುರ್ತು ಸಭೆ ನಡೆಸಿದರು.
ವಾಸ್ತವಾಂಶಗಳ ಮಾಹಿತಿ ಪಡೆದು ತನಿಖೆ ನಡೆಸುತ್ತಿರುವ ಮ್ಯಾಜಿಸ್ಟ್ರೇಟ್ನ ಅಧಿಕಾರಿಯಿಂದ ಮಧ್ಯಂತರ ವರದಿ ಪಡೆದುಕೊಂಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಜೀವಹಾನಿಯಾಗಿದ್ದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿಯವರಿಂದ ವಿವರಣೆ ಕೇಳಿತು. ಈ ಹಿನ್ನೆಲೆಯಲ್ಲಿ ಖುದ್ದು ದೆಹಲಿಗೆ ಬರುವಂತೆ ತಾಕೀತು ಮಾಡಲಾಯಿತು.
ಡಿ.ಕೆ.ಶಿವಕುಮಾರ್ ನಿನ್ನೆ ದೆಹಲಿಯಲ್ಲೇ ಇದ್ದರು. ನಿನ್ನೆ ಸಂಜೆ ವಾಪಸ್ ಬೆಂಗಳೂರಿಗೆ ಬಂದು ಇಂದು ಬೆಳಿಗ್ಗೆ ಮತ್ತೆ ದೆಹಲಿಗೆ ತೆರಳಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ವಿರೋಧಪಕ್ಷಗಳು ರಾಜ್ಯ ಸರ್ಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ವಾಗ್ದಾಳಿ ನಡೆಸುತ್ತಿವೆ. ರಾಷ್ಟ್ರಮಟ್ಟದಲ್ಲೂ ಬಿಜೆಪಿ ನಾಯಕರು ಈ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ.
ಇತ್ತ ರಾಜ್ಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರ ಅತ್ಯುತ್ಸಾಹದಿಂದಲೇ ಭದ್ರತಾ ವೈಫಲ್ಯಗಳಾಗಿವೆ ಎಂಬ ಆಕ್ಷೇಪಗಳು ಕೇಳಿಬಂದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯ ಬಳಿಕ ನಡೆದ ವಿಶೇಷ ಸಮಾಲೋಚನೆಯಲ್ಲಿ ಈ ಬಗ್ಗೆ ಡಿ.ಕೆ.ಶಿವಕುಮಾರ್ರನ್ನು ಖಾರವಾಗಿ ಪ್ರಶ್ನಿಸಿದ್ದರು. ಆನಂತರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಮುಖ ತಿರುಗಿಸಿಕೊಂಡಂತಿದ್ದರು.
ಇಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ವಿಮಾನನಿಲ್ದಾಣದಿಂದ ಕರ್ನಾಟಕ ಭವನದವರೆಗೂ ಒಂದೇ ಕಾರಿನಲ್ಲಿ ಪ್ರಯಾಣಿಸಿದರು. ಇಬ್ಬರ ನಡುವೆ ಬೇಸರವಿದೆ. ಎಂಬ ಅಪವಾದವನ್ನು ನಿವಾರಿಸುವ ಪ್ರಯತ್ನ ಮಾಡಿದರು. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಚರ್ಚೆ ನಡೆಸಲಾಗಿದೆ.
ಕಾಲ್ತುಳಿತ ಪ್ರಕರಣದ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ. ಸಚಿವ ಸಂಪುಟ ಪುನರ್ರರಚನೆ ಹಾಗೂ ವಿಧಾನಪರಿಷತ್ ಸದಸ್ಯರ ನೇಮಕಾತಿಯ ವಿಚಾರಗಳೂ ಪ್ರಸ್ತಾವನೆಯಾಗಿವೆ.
ವಿಧಾನಪರಿಷತ್ಗೆ ಈಗಾಗಲೇ ನಾಲ್ವರ ಹೆಸರನ್ನು ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಕಚೇರಿ ಮುಂದಾಗಿತ್ತು. ಅದರಲ್ಲಿ ಕೆಲವರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿಲ್ಲ, ಬೇರೆ ಬೇರೆ ಚಟುವಟಿಕೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಅವರಿಂದ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂಬ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಕೆಲವರು ನೇಮಕಾತಿಯಾದರೆ ವಿರೋಧಪಕ್ಷಗಳಿಗೆ ಮತ್ತೊಂದು ಅಸ್ಪ ನೀಡಿದಂತಾಗುತ್ತದೆ ಎಂಬ ಟೀಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಕ್ಕೆ ನೇಮಕಾತಿ ಜೊತೆಗೆ ಒಂದಷ್ಟು ಮಂದಿ ಅಸಮರ್ಥ ಹಾಗೂ ನಿಷ್ಕ್ರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷನಿಷ್ಠರು ಹಾಗೂ ಪ್ರಭಾವಿಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಎಂಬ ಒತ್ತಡಗಳಿವೆ. ಜೊತೆಗೆ ಕೆಲವರ ಖಾತೆಗಳ ಬದಲಾವಣೆ ಬಗ್ಗೆಯೂ ಚರ್ಚೆಗಳಾಗಿವೆ ಪರಿಶೀಲನೆ ನಡೆಸಿ ನಿರ್ಧಾರ ತಿಳಿಸುವುದಾಗಿ ಹೈಕಮಾಂಡ್ ಹೇಳಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆಯೂ ಇದೇ ವೇಳೆ ಗಂಭೀರ ಚರ್ಚೆ ನಡೆದಿದೆ. ದೆಹಲಿಗೆ ತಲುಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಚರ್ಚೆ ನಡೆಸಿದರು.
ಈ ಮೊದಲು ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ದೆಹಲಿಯಲ್ಲಿ ಭಾರೀ ಲಾಬಿ ನಡೆಸಿದರು. ಆದರೆ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಬದಲಾವಣೆ ಬಗ್ಗೆ ಯಾವುದೇ ಸುಳಿವು ನೀಡದ ಹಿನ್ನೆಲೆಯಲ್ಲಿ ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ವಾಪಸ್ ಬಂದಿದ್ದರು. ಈಗ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ದಾಳವನ್ನು ಉರುಳಿಸಲಾಗಿದೆ. ದೆಹಲಿಯಲ್ಲಿ ನಡೆದ ಮಹತ್ವದ ಸಭೆಗಳು ರಾಜ್ಯರಾಜಕಾರಣದಲ್ಲಿ ಭಾರೀ ಬದಲಾವಣೆಯ ನಿರೀಕ್ಷೆ ಹುಟ್ಟಿಸಿವೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.