Sunday, June 1, 2025
Homeರಾಜ್ಯSSLC ಪರೀಕ್ಷೆಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPIಗಳಿಗೆ ನೋಟಿಸ್ ನೀಡುವಂತೆ ಸಿಎಂ ಸೂಚನೆ

SSLC ಪರೀಕ್ಷೆಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPIಗಳಿಗೆ ನೋಟಿಸ್ ನೀಡುವಂತೆ ಸಿಎಂ ಸೂಚನೆ

CM instructs to issue notices to DDPIs of districts with less than 60% results in SSLC exams

ಬೆಂಗಳೂರು,ಮೇ31- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು.

ವಿಧಾನಸೌಧದಲ್ಲಿಂದು ನಡೆದ ರಾಜ್ಯದ ಪ್ರಗತಿ ಪರಿಶೀಲನೆ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಡಿಪಿಐಗಳು ನೋಟಿಸ್‌ ನೀಡುವ ಉತ್ತರ ಸಮರ್ಪಕವಾಗಿರದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಎಸ್ಎಸ್ಎಲ್ಸಿಯಲ್ಲಿ ಫಲಿತಾಂಶ ಕಡಿಮೆ ಬಂದಿರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ನೆಪ ಹೇಳಬೇಡಿ ಎಂದು ಭಾಟಿ ಬೀಸಿದರು.

ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬಂದಿದೆ. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಬೇಕು. ಇಲ್ಲ ಸಲ್ಲದ ನೆಪ ಹೇಳಬೇಡಿ, ಶಿಕ್ಷಕರು ಮತ್ತು ಡಿಡಿಪಿಐ ಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದು ಅವರು ನಿರ್ದೇಶಿಸಿದರು.

ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆಯನ್ನು ತಕ್ಷಣ ಸಿದ್ಧಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಅವರು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು. ಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು, ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರೆಯೇ? ಎಂಬ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತಿ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ ಎಂದರು.

ಸರ್ಕಾರವು ಮಕ್ಕಳಿಗೆ ಮೊಟ್ಟೆ, ಹಾಲು, ರಾಗಿಮಾಲ್ಟ್, ಹಾಸ್ಟೆಲ್ ಸವಲತ್ತು ಎಲ್ಲಾ ಕೊಟ್ಟರೂ ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆಯಾಗುತ್ತಿದೆ ಎಂದು ಪ್ರಶ್ನಿಸಿದ ಅವರು, ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ, ಡಿಡಿಪಿಐಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದನ್ನು ಬಿಟ್ಟು ಇಡೀ ಜಿಲ್ಲೆಯಲ್ಲಿ ಪ್ರಯಾಣ ಮಾಡಬೇಕು. ಸಿಇಒಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್ ಸೂಚನೆ ನೀಡಿ ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ತಿಳಿಸಿದರು. ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಜಿಲ್ಲೆಗಳ ಸಿಇಓಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶಬರುತ್ತದೆಎಂದರು.

ಕ್ರಿಮಿನಲ್ ಕೇಸ್ ಹಾಕಿ:
ಹಿಂದುಳಿದವರು, ದಲಿತರು, ಆಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಸರಿಯಾಗಿ ನಿಗಾ ವಹಿಸಿ, ವರದಿ ನೀಡದ ಪಿಡಿಒಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ ಮುಖ್ಯಮಂತ್ರಿ, ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

RELATED ARTICLES

Latest News