Saturday, July 27, 2024
Homeರಾಜಕೀಯಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ, ಬಿಜೆಪಿಯವರು ಭ್ರಮೆಯಲ್ಲಿದ್ದಾರೆ : ಸಿಎಂ

ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ, ಬಿಜೆಪಿಯವರು ಭ್ರಮೆಯಲ್ಲಿದ್ದಾರೆ : ಸಿಎಂ

ಬೆಂಗಳೂರು, ಮೇ 13- ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಭ್ರಮೆಯಲ್ಲಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಆಪರೇಷನ್‌ ಕಮಲ ಮಾಡಿ ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೋಲು ಕಾಣುತ್ತಿದೆ. ಹೀಗಾಗಿ ಮಹಾರಾಷ್ಟ್ರದಲ್ಲಿನ ಏಕನಾಥ ಶಿಂಧೆ ಅವರ ಸರ್ಕಾರವೇ ಪತನಗೊಳ್ಳಲಿದೆ. ಕೇಂದ್ರದಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ. ಕಾಂಗ್ರೆಸ್‌ನವರು ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ತಿಳಿಸಿದರು.

ನಮ್ಮ ಶಾಸಕರು ಮಾರಾಟಗೊಳ್ಳಲು ತಯಾರಿಲ್ಲ . ಬಿಜೆಪಿಯವರು ಕಳೆದ ಒಂದು ವರ್ಷದಿಂದಲೂ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಯಶಸ್ವಿಯಾಗಿಲ್ಲ. ಪ್ರತಿ ಬಾರಿಯೂ ವಿಫಲವಾಗುತ್ತರೇ ಇದ್ದಾರೆ. ಪ್ರಯತ್ನ ಮಾಡುವುದು, ವಿಫಲವಾಗುವುದು ಅವರ ಚಾಳಿಯಾಗಿದೆ. ಹೀಗಾಗಿ ಅವರು ಮತ್ತೊಮ್ಮೆ ಪ್ರಯತ್ನಿಸುವುದಿಲ್ಲ ಎಂಬ ನಿರೀಕ್ಷೆಯಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದಾಗಿ ಸರ್ಕಾರ ಪತನಗೊಳ್ಳುವ ಮಾತನಾಡುತ್ತಿದ್ದಾರೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಲಿನ ಭಯ ಎದುರಾಗಿದ್ದು, ಮಾತು ಹಿಡಿತ ತಪ್ಪಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿ.ಕೆ.ಶಿವಕುಮಾರ್‌ ಮಾತನಾಡಿ, ಏಕನಾಥ್‌ ಶಿಂಧೆ ಅವರ ಸರ್ಕಾರ ಉಳಿಯುವುದೇ ಅನುಮಾನವಾಗಿದೆ. ಶಿವಸೇನೆ ಮತ್ತು ಎನ್‌ಸಿಪಿಯಿಂದ ವಲಸೆ ಹೋದವರು ಈಗ ಮಾತೃಪಕ್ಷದತ್ತ ಮರಳುತ್ತಿದ್ದಾರೆ. ಪ್ರಧಾನಿಯವರು ಸೋಲಿನ ಆತಂಕದಲ್ಲಿ ಉದ್ಧವ್‌ ಠಾಕ್ರೆ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು.

RELATED ARTICLES

Latest News