Tuesday, September 17, 2024
Homeರಾಜ್ಯವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜು.16– ರಾಜ್ಯ ಸರ್ಕಾರಿ ನೌಕರರ ಮೂಲ ವೇತನ ಮತ್ತು ಪಿಂಚಣಿಯನ್ನು ಏಳನೇ ರಾಜ್ಯ ವೇತನ ಆಯೋಗದ ಶಿಫಾರಸು ಆಧರಿಸಿ ಶೇ.58.50ರವರೆಗೆ ಪರಿಷ್ಕರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಪ್ರಕಟಿಸಿದರು.

ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 2022ರ ನವೆಂಬರ್ 19ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಆಯೋಗವು 2024ರ ಮಾರ್ಚ್ 24ರಂದು ವರದಿ ನೀಡಿದೆ ಎಂದು ವಿವರಿಸಿದರು.

7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಽತ ಭತ್ಯೆ, ಪಿಂಚಣಿಯನ್ನು 2022ರ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಮುಂದಿನ ಆಗಸ್್ಟ 1ರಿಂದ ಅನುಷ್ಠಾನಗೊಳಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದರು.

2022ರ ಜುಲೈ 1ರಿಂದ ನೌಕರರ ಮೂಲ ವೇತನಕ್ಕೆ ಶೇಕಡಾ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆ ಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ ಎಂದು ಪ್ರಕಟಿಸಿದರು.

ಪರಿಷ್ಕರಣೆಯ ಬಳಿಕ ನೌಕರರ ಕನಿಷ್ಠ ಮೂಲವೇತನ 17 ಸಾವಿರದಿಂದ 27 ಸಾವಿರಕ್ಕೆ, ಗರಿಷ್ಟ ವೇತನ 1,50,600 ದಿಂದ 2,41.200 ವರೆಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ದಿಂದ 13,500ಕ್ಕೆ ಮತ್ತು ಗರಿಷ್ಠ ಪಿಂಚಣಿಯು 75,300 ದಿಂದ ರೂ. 1,20,600 ಕ್ಕೆ ಪರಿಷ್ಕರಣೆಗೊಳ್ಳುತ್ತದೆ ಎಂದು ವಿವರಿಸಿದರು.

ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ ಎಂದು ಹೇಳಿದರು.ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ.

ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.ಮುಖ್ಯಮಂತ್ರಿಯವರ ಪ್ರಕಟಣೆಯನ್ನು ಆಡಳಿತ ಪಕ್ಷದ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರು. ಸಭಾಧ್ಯಕ್ಷರು ಸರ್ಕಾರಿ ನೌಕರ ಪರವಾಗಿ ಸರ್ಕಾರವನ್ನು ಅಭಿನಂದಿಸುವುದಾಗಿ ತಿಳಿಸಿದರು.

RELATED ARTICLES

Latest News