Wednesday, June 25, 2025
Homeರಾಜ್ಯವೇಣುಗೋಪಾಲ್‌ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ವೇಣುಗೋಪಾಲ್‌ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

CM Siddaramaiah discusses with Venugopal

ನವದೆಹಲಿ,ಜೂ.25– ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನಿನ್ನೆಯಿಂದ ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಹೈಕಮಾಂಡ್‌ ನಾಯಕರನ್ನು ಹಂತಹಂತವಾಗಿ ಭೇಟಿ ಮಾಡುತ್ತಿದ್ದಾರೆ.

ನಿನ್ನೆ ಬೆಳಿಗ್ಗೆ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದರು. ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಇಂದು ಕೆ.ಸಿ.ವೇಣುಗೋಪಾಲ್‌ರೊಂದಿಗೆ ಮಾತುಕತೆ ನಡೆಸಿದ್ದಾರೆ.ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಧಾನಪರಿಷತ್‌ನಲ್ಲಿ ಖಾಲಿ ಇರುವ 4 ಸ್ಥಾನಗಳಿಗೆ ಸದಸ್ಯರನ್ನು ನೇಮಿಸಲು ಕೆಪಿಸಿಸಿಯ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ ಬಾಬು, ದಲಿತ ಸಂಘರ್ಷ ಸಮಿತಿಯ ಡಿ.ಜಿ.ಸಾಗರ್‌, ಮಹಿಳಾ ಘಟಕ ನಾಯಕಿ ಆರತಿಕೃಷ್ಣ, ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ಮಟ್ಟು ಅವರುಗಳ ಹೆಸರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಶಿಫಾರಸು ಮಾಡಲು ಮುಂದಾಗಿದ್ದರು. ಈ ಹಂತದಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿವೆ.

ಹೀಗಾಗಿ ಪಟ್ಟಿಯನ್ನು ತಡೆಹಿಡಿಯಲಾಗಿತ್ತು. ಸಂಪುಟದಲ್ಲಿ ಖಾಲಿ ಇರುವ ಒಂದು ಸ್ಥಾನವನ್ನು ಭರ್ತಿ ಮಾಡಲು ಹೈಕಮಾಂಡ್‌ ಈವರೆಗೂ ಹಸಿರು ನಿಶಾನೆ ತೋರಿಸಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಇಂದು ಬೆಳಿಗ್ಗೆ ಕೆ.ಸಿ.ವೇಣುಗೋಪಾಲ್‌ರೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ವಿಧಾನಪರಿಷತ್‌ ಸದಸ್ಯರ ನೇಮಕಾತಿ ವಿಚಾರವಾಗಿ ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿಯವರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ತಿಳಿಸುವುದಾಗಿ ಕೆ.ಸಿ.ವೇಣುಗೋಪಾಲ್‌ ಸ್ಪಷ್ಟಪಡಿಸಿದ್ದಾರೆ.

ಸಚಿವರು ಹಾಗೂ ಶಾಸಕರುಗಳ ವಿವಾದಿತ ಹೇಳಿಕೆಗಳ ಬಗ್ಗೆಯೂ ಕೆ.ಸಿ.ವೇಣುಗೋಪಾಲ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹುದಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ.

RELATED ARTICLES

Latest News