Friday, May 10, 2024
Homeರಾಜ್ಯವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ನ.18- ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ.

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಹೇಳಿದರು.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಭ್ರಮೆ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ.

ವಿಜೆಯೆಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ, ಆರ್.ಅಶೋಕರನ್ನು ವಿಪಕ್ಷ ನಾಯಕನ್ನಾಗಿ ಮಾಡಿರುವುದಕ್ಕೆ ಅವರೆಲ್ಲಾ ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ಕಾದು ನೋಡಿ ಬಿಜೆಪಿಯ ಪರಿಸ್ಥಿತಿ ಗೋತ್ತಾಗಲಿದೆ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕ ಹರೀಶ್‍ಗೌಡರನ್ನು ಕೇಳಿ ಎಂದರು.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಕಾಂಗ್ರೆಸ್ ನವರು ಕೌರವ ಸಂಸ್ಕøತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸುಳ್ಳು ಹೇಳುವುದರಿಂದಲೇ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು 19 ಸ್ಥಾನಕ್ಕೆ ಕುಸಿದಿದ್ದಾರೆ ಎಂದರು.

ತಮ್ಮ ಪುತ್ರ ಮಾಜಿ ಶಾಸಕ ಯತೀಂದ್ರರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದರೆ ಅಂತಹ ವ್ಯತ್ಯಾಸವೇನು ಆಗುವುದಿಲ್ಲ ಎಂದ ಅವರು, ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಾಲಿಶವಾದದ್ದು, ಪೆನ್ ಡ್ರೈವ್ ತೋರಿಸಿದ ಬಳಿಕ ವಿಧಾನಸಭೆ ಅಧಿವೇಶನ ನಡೆದಿತ್ತು. ಅಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ. ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಕುಮಾರಸ್ವಾಮಿಯವರಿಗೆ ಯಾರು ಮನವಿ ಮಾಡಿದವರು ಎಂಬ ಮಾಹಿತಿಯನ್ನು ಬಹಿರಂಗ ಪಡಿಸಲಿ.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅಪರಾಧ ಚಿಕ್ಕದಾಗಲಿ, ದೊಡ್ಡದಾಗಲಿ ಅಪರಾಧವೇ ಆಗಿದೆ. ಅವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದರು.

RELATED ARTICLES

Latest News