Sunday, June 15, 2025
Homeರಾಜ್ಯಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಿಎಂ ಪರದಾಡುತ್ತಿದ್ದಾರೆ : ವಿಜಯೇಂದ್ರ ವ್ಯಂಗ್ಯ

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಿಎಂ ಪರದಾಡುತ್ತಿದ್ದಾರೆ : ವಿಜಯೇಂದ್ರ ವ್ಯಂಗ್ಯ

CM struggling to allocate money for guarantees: Vijayendra

ಬೆಂಗಳೂರು,ಜೂ.14- ತಾವೇ ಘೋಷಣೆ ಮಾಡಿಕೊಂಡಿರುವ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಸ್ಥಿತಿಯನ್ನು ನೋಡಿದರೆ, ತಮಗೆ ಕನಿಕರ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸದೆ ಕೈ ಕೈ ಹಿಸುಕಿಕೊಳ್ಳುತ್ತಿರುವ ಸಿದ್ದರಾಮಯ್ಯನವರ ಪರಿಸ್ಥಿತಿ ಪಾಪ, ಯಾರಿಗೂ ಬರಬಾರದು. ತಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ, ಕುತಂತ್ರ ಮತ್ತು ಷಡ್ಯಂತ್ರ ಮಾಡಿದ್ದಾರೆ. ಬಹಳ ದೊಡ್ಡ ಮನಸ್ಸು ಮಾಡಿ, 16ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯದ ಪರವಾಗಿ ವಿಚಾರಮಂಡನೆ ಮಾಡಿದ್ದು, ಅವರಿಗೆ ಅಭಿನಂದನೆಗಳು.

ಕೇಂದ್ರದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳಿಗೆ ಮುಜುಗರವೇ, ಇವರು ರಾಜ್ಯದ ಮುಖ್ಯಮಂತ್ರಿಯೇ ಅಥವಾ ಕಾಂಗ್ರೆಸ್ಸಿನ ಮುಖ್ಯಮಂತ್ರಿಗಳೇ ಎಂದು ಬಿಜೆಪಿ ಕೇಳಿತ್ತು. ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿ ಹಣಕಾಸಿನ ವಿಚಾರ ಪ್ರಸ್ತಾಪ ಮಾಡಿ ಸರಿಪಡಿಸಿ ಎಂದು ಒತ್ತಾಯಿಸಿದರು.

ದೆಹಲಿ ಸಭೆಯಲ್ಲಿ ಭಾಗವಹಿಸಿದ್ದು ಸ್ವಾಗತಾರ್ಹ. ಆದರೆ, ಮುಖ್ಯಮಂತ್ರಿಗಳನ್ನು ನೋಡಿದರೆ ಪಾಪ ಅನಿಸುತ್ತದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಕೋಡೀಕರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಹಾಗಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕರ್ನಾಟಕವು 100 ರೂ. ಕೊಟ್ಟರೆ ಕೇವಲ 13 ರೂ. ಬರುತ್ತಿದೆ ಎಂದು ಅರ್ಧಸತ್ಯವನ್ನಷ್ಟೇ ಅವರು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈಗ ಜ್ಞಾನೋದಯವಾಗಿದಿಯೇ? : ನಮ ಹೋರಾಟಗಳ ಪರಿಣಾಮವಾಗಿ ಸುಮಾರು 3 ತಿಂಗಳ ಹಿಂದೆ ರಾಜ್ಯ ಸರಕಾರಕ್ಕೆ ಮುಜುಗರ ಆಗುತ್ತಿತ್ತು. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕಾಂತರಾಜು ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದರು. ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸುವುದಾಗಿ ಹೇಳಿದರು. 4-5 ಕ್ಯಾಬಿನೆಟ್‌ ಸಭೆ ಆದರೂ ಅನುಷ್ಠಾನ ಆಗಲಿಲ್ಲ. 10 ವರ್ಷ ಕಳೆದಿದ್ದು, ಅಂಕಿಅಂಶಗಳು ಅವೈಜ್ಞಾನಿಕ. ಇದನ್ನು ತರಾತುರಿಯಲ್ಲಿ ಮಾಡಬಾರದು. ಹೊಸದಾಗಿ ಮಾಡಬೇಕಿದೆ ಎಂದು ಹೇಳಿದರು.

ಕಾಂಗ್ರೆಸ್ಸಿನ ಡಿ.ಕೆ.ಶಿವಕುಮಾರ್‌ ಸೇರಿ ಸಚಿವರೂ ವಿರೋಧ ವ್ಯಕ್ತಪಡಿಸಿದ್ದರು. ಇದರ ನಡುವೆ ಈಗ ಅವರಿಗೆ ಜ್ಞಾನೋದಯವಾಗಿದೆ. ಯಾವಾಗ ಆರ್‌ ಸಿ ಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟರೋ, ಈಗ ವಿಷಯಾಂತರ ಮಾಡಲು ಜಾತಿ ಗಣತಿ ವಿಷಯ ಪ್ರಸ್ತಾಪಿಸಿದ್ದಾರೆ. ಅಂತಿಮವಾಗಿ ಈ ವಿಷಯದಲ್ಲಿ ಇವರು ಏನೂ ಮಾಡಲು ಸಾಧ್ಯವಿಲ್ಲ.

ಕೇಂದ್ರವು ಈಗಾಗಲೇ ಜನ ಗಣತಿ, ಜಾತಿ ಜನಗಣತಿ ಮಾಡುವುದಾಗಿ ಘೋಷಿಸಿದೆ. ಜಾತಿ ಗಣತಿಯು ರಾಜ್ಯ ಸರಕಾರದ ಪರಿಮಿತಿಗೆ ಬರುತ್ತದೆಯೇ ಎಂಬ ಅನುಮಾನಗಳು ಹೆಚ್ಚಾಗಿವೆ. ಗೊಂದಲ ಸೃಷ್ಟಿಸಲು ಇದನ್ನು ಮಾಡುತ್ತಿದ್ದಾರೆ. ತಾರ್ಕಿಕ ಅಂತ್ಯಕ್ಕೆ ಒಯ್ಯುವ ಮನಸ್ಸು ರಾಜ್ಯ ಸರ್ಕಾರ- ಸಿದ್ದರಾಮಯ್ಯನವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Latest News