ಬೆಂಗಳೂರು,ಮಾ.11– ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಪ್ರತಿ ಕ್ವಿಂಟಾಲ್ಗೆ 13,500 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ನಾನಾ ಕಡೆ ವ್ಯಾಪಕವಾಗಿ ಮೆಣಸಿ ನಕಾಯಿ ಬೆಳೆಯಲಾಗುತ್ತಿದೆ. ಈ ಹಿಂದೆ ಕರ್ನಾಟಕ ಸರ್ಕಾರ ಗುಂಟೂರು ಮೆಣಸಿನಕಾಯಿಗೆ 12,675 ರೂ.ಗಳ ದರ ನಿಗದಿ ಮಾಡಿತ್ತು.
ಆಂಧ್ರ ಪ್ರದೇಶ ಸರ್ಕಾರ 11,781 ರೂ.ಗಳನ್ನು ನಿಗದಿ ಮಾಡಿದೆ. ಕರ್ನಾಟಕದಲ್ಲಿ ಮೆಣಸಿನಕಾಯಿ ಬೆಳೆ ನಂಬಿ ನೂರಾರು ಮಂದಿ ರೈತರಿದ್ದಾರೆ. ಮಾರುಕಟ್ಟೆಯಲ್ಲಿ ದರ ಕುಸಿತದಿಂದ ಕೇವಲ ಆರ್ಥಿಕ ನಷ್ಟ ಅಷ್ಟೇ ಅಲ್ಲ, ರೈತರ ಕುಟುಂಬಗಳೂ ಸಂಕಷ್ಟಕ್ಕೆ ಸಿಲುಕಲಿವೆ ಎಂದು ಮುಖ್ಯಮಂತ್ರಿ ಆತಂಕ ವ್ಯಕ್ತಪಡಿಸಿದ್ದಾರೆ.
ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಮೆಣಸಿನ ಕಾಯಿ ದರವನ್ನು 13,500 ರೂ.ಗೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ರಿಗೂ ಈ ಕುರಿತು ಪತ್ರ ಬರೆಯಲಾಗಿದೆ.