ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ : ಸಿಎಂ ಬೊಮ್ಮಾಯಿ ತಿರುಗೇಟು

Social Share

ಬೆಂಗಳೂರು, ಜು.27- ಭ್ರಷ್ಟಾಚಾರದ ಗಂಗೋತ್ರಿಯನ್ನೇ ಹೊತ್ತಿಕೊಂಡಿರುವ ಕಾಂಗ್ರೆಸ್‍ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಹಿಂದಿನ ಅಧ್ಯಕ್ಷ ರಾಹುಲ್‍ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡಿ ವಿಚಾರಣೆಗೆ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ. ಮಾಡಬಾರದ್ದನ್ನೆಲ್ಲಾ ಮಾಡಿ ಈಗ ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸುವ ದುಸ್ಥಿತಿಗೆ ಬಂದಿದ್ದಾರೆ. ಜೈಲು, ಬೇಲ್ ಮೇಲೆ ಇರುವವರೆಲ್ಲಾ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ದುರದೃಷ್ಟಕರ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಹಿಟ್ ಆ್ಯಂಡ್ ರನ್ ಮಾಡುವು ದನ್ನು ಬಿಟ್ಟು, ಒಂದು ಜವಾಬ್ದಾರಿಯುತ ಪ್ರತಿಪಕ್ಷವಾಗಿ ವರ್ತನೆ ಮಾಡಲಿ. ನಿಮ್ಮ ಐದು ವರ್ಷದ ಆಡಳಿತಾವಯಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದ್ದವು ಎಂಬುದು ನಮಗೂ ಗೊತ್ತು. ಸೂಕ್ತ ಸಂದರ್ಭದಲ್ಲಿ ಅವರ ಕಾಲದ ಹಗರಣಗಳನ್ನು ಬಿಚ್ಚಿಡುತ್ತೇವೆಂದು ಬೊಮ್ಮಾಯಿ ಅವರು ಎಚ್ಚರಿಸಿದರು.

ನಮ್ಮ ಪಕ್ಷದ ವತಿಯಿಂದ ನಡೆಯುತ್ತಿರುವ ಸಮಾವೇಶವನ್ನು ಭ್ರಷ್ಟೋತ್ಸವ ಎನ್ನಲು ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇಲ್ಲ. ನಿಮ್ಮಿಂದ ನಮಗೆ ಯಾವುದೇ ಪ್ರಮಾಣ ಪತ್ರವೂ ಬೇಕಿಲ್ಲ. ಐದು ವರ್ಷದಲ್ಲಿ ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರೆ ನಿಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಏಕೆ ಕೂರಿಸುತ್ತಿದ್ದರು ಎಂದು ಪ್ರಶ್ನಿಸಿದರು.

ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮ ವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ರೈತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದವರಿಗೆ ನಮ್ಮ ಸರ್ಕಾರ ಏನೆಲ್ಲಾ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆಯೇ. ಅದರ ಫಲಾನುಭವಿಗಳು ಭಾಗವಹಿಸಲಿದ್ದಾರೆ.

ನಾಳೆ ಸಾಧ್ಯವಾದರೆ ಕಾಂಗ್ರೆಸ್ ನಾಯಕರು ಬಂದು ನೋಡಲಿ ಎಂದರು.ಜನರಿಂದ ಪ್ರಮಾಣ ಬೇಕೇ ಹೊರತು ಕಾಂಗ್ರೆಸ್‍ನಿಂದ ಪ್ರಮಾಣ ಪತ್ರ ಬೇಕಾಗಿಲ್ಲ. ನಾವು ಜನರ ಮಧ್ಯೆ ಇದ್ದುಕೊಂಡು ಜನೋತ್ಸವ ಮಾಡುತ್ತಿದ್ದೇವೆ. ಇವರ ಹಾಗೆ ವ್ಯಕ್ತಿ ಆಧಾರಿತ ಅಥವಾ ವ್ಯಕ್ತಿ ಪೂಜೆ ಮಾಡುತ್ತಿಲ್ಲ. ಕಾಂಗ್ರೆಸ್‍ಗೂ ಬಿಜೆಪಿಗೂ ಇರುವ ವ್ಯಾತ್ಯಾಸ ಇದೇ ಎಂದು ವಾಗ್ದಾಳಿ ನಡೆಸಿದರು.

ಸೂಕ್ತ ಕ್ರಮಕ್ಕೆ ಸೂಚನೆ: ದಕ್ಷಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಯಾರು ಕೊಲೆ ಪ್ರಕರಣದ ಆರೋಪಿಗಳನ್ನು ತತ್‍ಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಆ ವಲಯದ ಐಜಿಪಿ ಹಾಗೂ ಮಂಗಳೂರು ಎಸ್‍ಪಿಯವರ ಜತೆ ನಾನೇ ಮಾತನಾಡಿದ್ದೇನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದ್ದಾರೆ ಎಂದರು.

ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ. ಆರೋಪಿಗಳು ಕೇರಳ ಗಡಿ ಭಾಗದಿಂದ ಬಂದಿರಬಹುದೆಂಬ ಶಂಕೆ ಇದೆ. ನಾಕಾಬಂದಿ ರಚಿಸಿ ಪತ್ತೆ ಮಾಡಲು ಸೂಚಿಸಲಾಗಿದೆ. ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಎಚ್ಚರಿಸಿದರು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ಗೊತ್ತಿಲ್ಲ. ಒಂದು ವರ್ಗ ಸಮಾಜದಲ್ಲಿ ಇಂತಹ ದುಷ್ಕøತ್ಯ ನಡೆಸಲು ಸಂಚು ನಡೆಸುತ್ತದೆ. ಅಂತಹವರನ್ನು ಬಗ್ಗುಬಡಿಯಲು ನಮ್ಮ ಪೊಲೀಸರು ಸಿದ್ಧರಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು. ಕಾರ್ಯಾಚರಣೆಯ ವಿವರಗಳನ್ನು ಈ ಸಂದರ್ಭದಲ್ಲಿ ಬಹಿರಂಗಪಡಿಸುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

Articles You Might Like

Share This Article