Friday, May 3, 2024
Homeರಾಷ್ಟ್ರೀಯರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಯಾರಾಗ್ತಾರೆ ಕಾಂಗ್ರೆಸ್ ಅಭ್ಯರ್ಥಿ..?

ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಯಾರಾಗ್ತಾರೆ ಕಾಂಗ್ರೆಸ್ ಅಭ್ಯರ್ಥಿ..?

ನವದೆಹಲಿ,ಮಾ.29- ಉತ್ತರಪ್ರದೇಶದಲ್ಲಿ ಸ್ಪರ್ಧಿಸಲಿರುವ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಬಾಕಿ ಉಳಿದಿರುವ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಏಪ್ರಿಲ್ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ಮೂಲಗಳು ಹೇಳಿವೆ. ಐದನೇ ಹಂತದ ಮತದಾನದಲ್ಲಿ ಬರುವ ಈ ಕ್ಷೇತ್ರಗಳಿಗೆ ಏಪ್ರಿಲ್ 26ರಿಂದ ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದೆ. ಈ ಹಿನ್ನಲೆ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ರಾಯ್ ಬರೇಲಿ ಮತ್ತು ಅಮೇಥಿ ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆಗಳು ನಡೆದಿವೆ. ಆದರೆ ಯಾವುದೇ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿಲ್ಲ. ಉತ್ತರಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಾಗ ಐದನೇ ಹಂತದ ಮತದಾನದ ಕಾರಣ ರಾಯ್‍ಬರೇಲಿ ಮತ್ತು ಅಮೇಥಿಯ ಅಭ್ಯರ್ಥಿಗಳ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ.

ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ರಾಯ್‍ಬರೇಲಿಯಲ್ಲಿ ಗಾಂಧಿ ಕುಟುಂಬದ ಸದಸ್ಯರೊಬ್ಬರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಮೂಲಗಳ ಪ್ರಕಾರ ಈ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲು ಗಾಂಧಿ ಕುಟುಂಬದಿಂದ ಯಾರೂ ಮುಂದೆ ಬಂದಿಲ್ಲ. ಆದರೆ ರಾಯ್ ಬರೇಲಿ ಕ್ಷೇತ್ರದಲ್ಲಿ ಮೂರು ಬಾರಿ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ ವೈಯಕ್ತಿಕವಾಗಿ ದೂರವಾಣಿ ಮೂಲಕವೂ ಹೆಚ್ಚಿನ ಸಂಖ್ಯೆಯಲ್ಲಿ ಸಮೀಕ್ಷೆ ನಡೆಸಲಾಗಿದೆ. ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ಗಾಂಧಿ ಕುಟುಂಬಕ್ಕೆ ಈ ಸ್ಥಾನ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸಮೀಕ್ಷೆಯಲ್ಲೂ ಪರಿಶೀಲಿಸಿದೆ.

ರಾಯ್‍ಬರೇಲಿ ಮತ್ತು ಅಮೇಥಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿಂದೆಂದೂ ಇಷ್ಟೊಂದು ವಿಳಂಬ ಆಗಿರಲಿಲ್ಲ. ಈ ಬಾರಿ ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಪತ್ರ ಬರೆದ ಕೂಡಲೇ ಗಾಂಧಿ ಕುಟುಂಬದಿಂದ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಊಹಾಪೋಹ ಶುರುವಾಗಿದೆ. ಇದಲ್ಲದೆ ರಾಹುಲ್ ಗಾಂಧಿ ಚುನಾವಣೆಯಲ್ಲಿ ಸೋತ ನಂತರ ಅಮೇಥಿಯಲ್ಲಿ ರಾಹುಲ್ ಮತ್ತೆ ಸ್ರ್ಪಧಿಸುತ್ತಾರೋ ಇಲ್ಲವೋ ಎಂಬ ಊಹಾಪೋಹಗಳಿವೆ.

ಉತ್ತರಪ್ರದೇಶದಲ್ಲಿ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಸ್ಥಾನಗಳನ್ನು ಈಗ ನಿರ್ಧರಿಸಲಾಗಿದ್ದು, ಕಾಂಗ್ರೆಸ್ ಈಗಾಗಲೇ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದಿಂದ ಯಾರೂ ಚುನಾವಣೆಗೆ ಸ್ಪರ್ಧಿಸದಿದ್ದರೆ ಅದು ಕಾರ್ಯಕರ್ತರ ನೈತಿಕತೆಯ ಮೇಲೆ ಪರಿಣಾಮ ಬೀರುವುದು ಖಚಿತ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಲ್ಲಿ ಒಬ್ಬರು ಅಥವಾ ಇಬ್ಬರೂ ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.

ಗೆಲುವು ಅಥವಾ ಸೋಲು ತನ್ನದೇ ಆದ ಸ್ಥಾನವನ್ನು ಹೊಂದಬಹುದು. ಆದರೆ ಚುನಾವಣಾ ಕಣಕ್ಕೆ ಪ್ರವೇಶಿಸುವ ಮೂಲಕ, ಸಕಾರಾತ್ಮಕ ಸಂದೇಶವು ಖಂಡಿತವಾಗಿಯೂ ಕಾರ್ಯಕರ್ತರನ್ನು ತಲುಪುತ್ತದೆ ಎಂದು ಮನವೊಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ

RELATED ARTICLES

Latest News