Saturday, September 23, 2023
Homeಇದೀಗ ಬಂದ ಸುದ್ದಿಸಿದ್ದು, ಡಿಕೆಶಿ ಸಹಿಗಳಿಗೆ ಗ್ಯಾರಂಟಿಯೇ ಇಲ್ಲವೇ?: ಎಚ್‍ಡಿಕೆ

ಸಿದ್ದು, ಡಿಕೆಶಿ ಸಹಿಗಳಿಗೆ ಗ್ಯಾರಂಟಿಯೇ ಇಲ್ಲವೇ?: ಎಚ್‍ಡಿಕೆ

- Advertisement -

ಬೆಂಗಳೂರು,ಮೇ 30-ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಭರವಸೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸ್ವತಃ ಮುಖ್ಯಮಂತ್ರಿಗಳೇ ಜೂನ್ ಒಂದರಿಂದ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ ಎಂದು ಆಗ್ರಹಿಸಿದ್ದಾರೆ.

- Advertisement -

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ಗ್ಯಾರಂಟಿ ಬೇಡಿಕೆಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರ ಅವಧಿಯ 20,000 ಕೋಟಿ ರೂ.ಗಳ ಬಿಲ್ ಪಾವತಿಗೆ ತಡೆ

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ.

ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ಗ್ಯಾರಂಟಿ ಜಾಹೀರಾತುಗಳು ಇನ್ನೂ ಜನಮಾನಸದಿಂದ ಮಾಸಿಲ್ಲ. ಗ್ಯಾರಂಟಿ ಅನುಷ್ಠಾನ ವಿಳಂಬದಿಂದ ಸರ್ಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ.

ಕ್ರೇಜಿಸ್ಟಾರ್ ರವಿಚಂದ್ರನ್’ಗೆ ಹುಟ್ಟುಹಬ್ಬದ ಸಂಭ್ರಮ

ಅದು ಬಿಟ್ಟು ಕೆಲ ಸಚಿವರು, ಶಾಸಕರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

congressguarantee, #siddaramaiah, #dkshivakumar, #hdkumaraswamy,

- Advertisement -
RELATED ARTICLES
- Advertisment -

Most Popular