ಬೆಂಗಳೂರು,ಜೂ.13- ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ನಿದೇರ್ಶನದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಂತೆ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿತು.
ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಸಿದರು. ನ್ಯಾಯಾಲಯದಲ್ಲಿ ಹಾಜರಿದ್ದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯನ್ನು ಬಂಧಿಸಿ ತಮ ವಶಕ್ಕೆ ಪಡೆದುಕೊಂಡರು.
ಕೊಲೆ ಪ್ರಕರಣ ಸಂಬಂಧ ಸಾಕ್ಷಿಗಳ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ ಕಳೆದ ಮಂಗಳವಾರ ವಿನಯ್ ಕುಲಕರ್ಣಿಗೂ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ವಿಚಾರಣೆ ವೇಳೆ ಅವರ ಪರ ವಕೀಲರು ಗೈರು ಹಾಜರಿಗೆ ಕೆಲ ಕಾರಣ ನೀಡಿ, ಹಾಜರಾತಿಗೆ ವಿನಾಯಿತಿ ಕೋರಿದ್ದರು. ಇದಕ್ಕೆ ಸಮತಿ ಸೂಚಿಸಿದ್ದ ನ್ಯಾಯಾಲಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತ್ತು.
ಇದೇ ಪ್ರಕರಣದಲ್ಲಿ ಜೂ.6ರಂದು ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ರದ್ದುಗೊಳಿಸಿದ್ದು, ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು.
2020ರಲ್ಲಿ ಬಂಧಿಸಲ್ಪಟ್ಟು 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕುಲಕರ್ಣಿ ಅವರ ಮೇಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪ ಹೊರಿಸಲಾಗಿತ್ತು. ಜಾಮೀನು ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಜಾಮೀನು ರದ್ದುಗೊಳಿಸುವಂತೆ ಕೋರಿತ್ತು.
ನ್ಯಾಯಾಲಯವು ಮನವಿಯನ್ನು ಸ್ವೀಕರಿಸಿ ಅವರ ಜಾಮೀನನ್ನು ರದ್ದುಗೊಳಿಸಿತ್ತು. 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಕ್ಷೇತ್ರದ ಹೊರಗಿದ್ದರೂ ಗೆಲುವು ಸಾಧಿಸುವ ಮೂಲಕ ವಿನಯ ಕುಲಕರ್ಣಿ ಇತಿಹಾಸ ನಿರ್ಮಿಸಿದ್ದರು. ಎರಡು ವರ್ಷಗಳ ಕಾಲ ಕ್ಷೇತ್ರದ ಹೊರಗಿದ್ದುಕೊಂಡೇ ಆಡಳಿತ ಮಾಡಿದ್ದ ಅವರು, ಇದೀಗ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ.
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನನ್ನು ಕೋರ್ಟ್ ರದ್ದು ಮಾಡಿದೆ. ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶಿಸಿದೆ. ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ ಈ ತೀರ್ಪು ನೀಡಿತ್ತು. ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ ಕಾರಣಕ್ಕೆ ಜಾಮೀನು ರದ್ದು ಮಾಡಲಾಗಿತ್ತು. ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದಾರೆ. ಈ ಹಿಂದೆ ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ, 2021ರ ಆಗಸ್ಟ್ 11ರಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.
ಪ್ರಕರಣದ ಹಿನ್ನಲೆ :
ಸಿಬಿಐ ಈ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ವಿನಯ್ ಕುಲಕರ್ಣಿ ಅವರು ಸಾಕ್ಷಿಗಳಿಗೆ 1 ಲಕ್ಷ ರೂಪಾಯಿ ಹಣದ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸುವಂತೆ ಸಿಬಿಐ ಮನವಿ ಮಾಡಿತ್ತು. ಯೋಗೀಶ್ ಗೌಡ ಅವರ ಕೊಲೆ 2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿತ್ತು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದಾರೆ. ಬಸವರಾಜ ಮುತ್ತಗಿ ಮೊದಲ ಆರೋಪಿಯಾಗಿದ್ದು, ಶಿವಾನಂದ ಶ್ರೀಶೈಲ ಬಿರಾದಾರ 17ನೇ ಆರೋಪಿ ಮತ್ತು ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ.
ಕಳೆದ ವರ್ಷ ಗುರುನಾಥ ಗೌಡ ಎಂಬುವವರು ವಿಚಾರಣಾ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದರು. ವಿನಯ್ ಕುಲಕರ್ಣಿ ಮತ್ತು ನನ್ನ ತಮ ಯೋಗೇಶ್ ಗೌಡ ನಡುವೆ ಒಂದು ಬಾರಿ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಗಲಾಟೆ ನಡೆದಿತ್ತು. ಅದಾದ ಕೆಲವೇ ದಿನಗಳಲ್ಲಿ ನನ್ನ ತಮನ ಹತ್ಯೆಯಾಯಿತು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಮೊದಲ ಆರೋಪಿ ಬಸವರಾಜ ಮುತ್ತಗಿ ತಪ್ಪೊಪ್ಪಿಕೊಂಡಿದ್ದಾನೆ. ಆತ ಕೋರ್ಟ್ ಮುಂದೆ ಹಲವು ವಿಷಯಗಳನ್ನು ಹೇಳಿದ್ದಾರೆ.