ದೇವಾಲಯಗಳ ಸಮಗ್ರ ಅಭಿವೃದ್ಧಿಗೆ “ದೈವ ಸಂಕಲ್ಪ” ಯೋಜನೆ

Social Share

ಬೆಂಗಳೂರು,ಫೆ.23- ರಾಜ್ಯದ 25 ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಪ್ರತ್ಯೇಕ ದೈವ ಸಂಕಲ್ಪ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ, ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಆಯುಕ್ತರಾದ ರೋಹಿಣಿ ಸಿಂಧೂರಿ ಭಾಗವಹಿಸಿದ್ದರು.
ಪ್ರಸ್ತುತ ರಾಜ್ಯದಲ್ಲಿರುವ 205 ಎ ದರ್ಜೆಯ ದೇವಾಲಯ ಗಳನ್ನು ಸಮಗ್ರವಾಗಿ ಅಭಿವೃದ್ಧಿ ಗೊಳಿಸುವುದು ದೈವ ಸಂಕಲ್ಪ ಯೋಜನೆಯ ಪ್ರಮುಖ ಉದ್ದೇಶ ವಾಗಿದೆ. ಈ ಯೋಜನೆಯ ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ 25 ದೇವಾಲಯಗಳನ್ನು 1,140 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ.
ಲಕ್ಷಾಂತರ ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸ್ವಾಮಿ ಬೆಟ್ಟ, ಚಾಮುಂಡಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ, ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನ, ಸವದತ್ತಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನಗಳು ಈ ಯೋಜನೆಯ ಅಡಿಯಲ್ಲಿ ಸೇರಿವೆ. ಇದೇ ವೇಳೆ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಯನ್ನು (ಐಟಿಎಂಎಸ್) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡಲಿದ್ದಾರೆ.
ಈ ಯೋಜನೆಯಿಂದ ಒಂದೇ ವೆಬ್‍ಸೈಟ್‍ನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳ ಸಮಗ್ರ ಮಾಹಿತಿಗಳು ಜನರ ಬೆರಳ ತುದಿ ಯಲ್ಲೇ ಲಭ್ಯವಿರಲಿವೆ. ಅಲ್ಲದೇ ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್‍ಲೈನ್ ಮೂಲಕ ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರಲಿದೆ.
ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರಿಗೆ/ಭಕ್ತಾದಿಗಳಿಗೆ ಪಡೆಯಲು ಅನುಕೂಲವಾಗುವಂತೆ ಐಟಿಎಂಎಸ್ ತಂತ್ರಾಂಶದಲ್ಲಿ ಮಾಹಿತಿಗಳನ್ನು ಅಪ್‍ಲೋಡ್ ಮಾಡುವ ವ್ಯವಸ್ಥೆಯಿದೆ.
ದೇವಾಲಯಗಳ ಆಸ್ತಿಗಳ ವಿವರ ಮತ್ತು ಅವುಗಳ ವಹಿವಾಟಿನ ಮಾಹಿತಿಗಳೂ ಇರಲಿದ್ದು, ಜಗತ್ತಿನ ಯಾವುದೇ ಭಾಗದಿಂದ ಆನ್‍ಲೈನ್ ಮೂಲಕ ಕಾಣಿಕೆಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಭೂ ದಾಖಲೆಗಳ ದತ್ತಾಂಶದೊಂದಿಗೆ ಸಂಯೋಜನೆ ಮಾಡಬಹುದಾದ ತಾಂತ್ರಿಕತೆಯನ್ನು ಅಳವಡಿಸ ಲಾಗಿದ್ದು ವಿವಿಧ ರೀತಿಯ ವರದಿ ಗಳನ್ನು ಪಡೆಯಬಹುದಾಗಿದೆ.
# ಭಕ್ತರು/ಪ್ರವಾಸಿಗರಿಗೆ ಮೂಲ ಸೌಕರ್ಯ:
ಭಕ್ತಾದಿಗಳಿಗೆ ವಸತಿ ಸೌಲಭ್ಯ, ಉತ್ತಮ ರಸ್ತೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪಾರಂಪರಿಕ ಶಿಲಾಮಯ ಕಟ್ಟಡಗಳ ನಿರ್ಮಾಣ, ಮಲ್ಟಿಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ಸ್ನಾನ ಘಟ್ಟ ಹಾಗೂ ಸುಸಜ್ಜಿತ ಅನ್ನದಾಸೋಹ ಭವನ, ವಾಣಿಜ್ಯ ಸಂಕೀರ್ಣ ಕಟ್ಟಡಗಳು, ಶೌಚಾಲಯಗಳು, ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕ, ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಅಭಿವೃದ್ಧಿಗೊಳಿಸಲಾಗುವುದು.
ದೇಶದ ಧಾರ್ಮಿಕ ಕ್ಷೇತ್ರಗಳನ್ನು ಸಮಗ್ರ ವಾಗಿ ಅಭಿವೃದ್ಧಿಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

Articles You Might Like

Share This Article