ಬೆಳಗಾವಿ, ಸೆ.15- ಗಣೇಶೋತ್ಸವ ಸಂಭ್ರಮದ ಮೊದಲ ದಿನವೇ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಚವ್ಹಾಟ ಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರ ಬರಲಾಗದೆ ಸಿಲುಕಿಕೊಂಡ ಪರಿಣಾಮ ಈ ದುರಂತ ಸಂಭವಿಸಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ದಮೋನೆ (50) ಮೃತಪಟ್ಟವರು.
ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
