ಚಿಕ್ಕಮಗಳೂರು,ಜೂ.16-ನಗರದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ನಗರದ ಕೆಎಸ್ಆರ್ಟಿಸಿ ಬಸ್ ಡಿಪೋ ಸಮೀಪದ ನಿರ್ಜನ ಪ್ರದೇಶದ ಪೊದೆಯೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ.
ಸ್ಥಳೀಯರು ಪೊದೆಯೊಳಗೆ ಅನುಮಾನಾಸ್ಪದವಾಗಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ ವೇಳೆ ಅದರೊಳಗೆ ಕೇವಲ ಒಂದೇ ದಿನದ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ.
ಮಗು ಸಾವನ್ನಪ್ಪಿದ ಬಳಿಕ ಅಂತ್ಯಸಂಸ್ಕಾರ ನಡೆಸದೆ, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದು ಮಾನವೀಯತೆ ಮರೆತ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗು ಆಸ್ಪತ್ರೆಯಲ್ಲಿ ಜನಿಸಿದ್ದಿರಬಹುದೆಂಬ ಅನುಮಾನ ಮೂಡಿದ್ದು, ಜನನದ ಬಳಿಕ ಹೊಕ್ಕಳು ಬಳ್ಳಿಗೆ ಹಾಕುವ ವೈದ್ಯಕೀಯ ಕ್ಲಿಪ್ ಹಾಗೆಯೇ ಇರುವುದು ಪತ್ತೆಯಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಅಲ್ಲದೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಮಗುವನ್ನು ಇಲ್ಲಿ ತಂದು ಎಸೆದವರ ಪತ್ತೆಗೆ ಜಾಲ ಬೀಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಮಾಯಕ ನವಜಾತ ಶಿಶುವಿನ ಶವವನ್ನು ಪೊದೆಯೊಳಗೆ ಎಸೆದು ಹೋದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
