ಬೆಳಗಾವಿ,ಮೇ 26- ಗೂಡ್ಸ್ ಆಟೋ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ತಿಂಗಳ ಮಗು ಸೇರಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಭಾಗ ಪಟ್ಟಣದ ಹೊರವಲಯದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ರಾಯಭಾಗ ತಾಲ್ಲೂಕಿನ ಬೊಮನಾಳ ಗ್ರಾಮದ ಮಹಂತೇಶ್ ಮಾನೆ(27), ಸಾಕ್ಷಿ ಮಾನೆ (23) ಹಾಗೂ ಅವರ ಸಮರ್ಥ್(9) ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ. ಬೊಮನಾಳ ಗ್ರಾಮದಿಂದ ರಾಯಭಾಗಕ್ಕೆ ದ್ವಿಚಕ್ರ ವಾಹನದಲ್ಲಿ ದಂಪತಿ ಹಾಗೂ ಮಗು ತೆರಳುತ್ತಿದ್ದಾಗ ಎದುರಿನಿಂದ ರಾಂಗ್ ಸೈಡ್ನಲ್ಲಿ ಬಂದ ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರೂ ಸಹ ಕೆಳಗೆ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ರಾಯಭಾಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತೊಂದು ಮಗುವಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವುದಕ್ಕೆ ಬೊಮನಾಳ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
