ಬೆಂಗಳೂರು,ಮೇ 14- ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲ ತಾಪ ಜೋರಾಗಿದ್ದರೆ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಸಾಲುಸಾಲು ಅವಾಂತರಗಳು ಸೃಷ್ಟಿಯಾಗಿವೆ.ಗಾಳಿಗೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಮನೆಯಲ್ಲಿದ್ದ ದಿನಸಿ ಸಾಮಗ್ರಿಗಳು, ಪೀಠೋಪಕರಣಗಳು ಹಾನಿಯಾಗಿವೆ.
ಇನ್ನೂ ಕೆಲವೆಡೆ ವಿದ್ಯುತ್ ಕಂಬಗಳು, ತೆಂಗಿನ ಮರಗಳು ಉರುಳಿಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ರಾತ್ರಿಯಿಡೀ ಕತ್ತಲಲ್ಲಿ ಕಾಲ ಕಳೆಯುವಂತಾಗಿತ್ತು.ಬಯಲುಸೀಮೆ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಜೋರಾಗಿದ್ದು, ಮೋಡ ಕವಿಯುತ್ತಿದೆ. ಆದರೆ ಮಳೆ ಮಾತ್ರ ಧರೆಗೆ ಇಳಿಯುತ್ತಿಲ್ಲ. ಬಿಸಿಲ ಬೇಗೆಯಿಂದ ಬಳಲಿ ಬೆಂಡಾಗಿರುವ ಜನರು ಮುಗಿಲು ನೋಡುತ್ತಿದ್ದರೆ, ಮಳೆಗಾಗಿ ಕೆಲವು ಜಿಲ್ಲೆಗಳಲ್ಲಿ ಹೋಮ-ಹವನ ಸೇರಿದಂತೆ ವಿಶೇಷ ಪೂಜೆ ನಡೆಸಲಾಗುತ್ತಿದೆ.
