Tuesday, April 14, 2026
Homeಜಿಲ್ಲಾ ಸುದ್ದಿಗಳುನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು : ಸಿಎಂ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು : ಸಿಎಂ

Police should not compromise on justice delivery for any reason: CM

ಮೈಸೂರು,ಮಾ.29- ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌‍ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರಿಗೂ ವೃತ್ತಿಪರ ಯಶಸ್ಸನ್ನು ಕೋರಿ ಶುಭಹಾರೈಸಿ ಮಾತನಾಡಿದರು.

ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸ್‌‍ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿ ಜಾತಿ ವ್ಯವಸ್ಥೆಯಿದ್ದು, ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ.
ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀತಿಯಿಂದ ಓಡಾಡುವಂತಾದಾಗ ಮಾತ್ರ, ನಿಜಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ ಗಾಂಧಿಯವರು ಹೇಳಿದ್ದರು. ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ದೊರೆಯಬೇಕು. ಆದ್ದರಿಂದ ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದರು.

377 ಸಬ್‌ ಇನ್‌ಸ್ಪೆಕ್ಟರ್‌ಗಳು ಸೇವೆಗೆ ಸೇರ್ಪಡೆ :
ತರಬೇತಿಯಲ್ಲಿ ಕಲಿತಿದ್ದನ್ನು ಜ್ಞಾಪಕವಿಟ್ಟುಕೊಂಡು ಜೀವನದಲ್ಲಿ ಪಾಲಿಸಬೇಕು. ತರಬೇತಿಗಳು ಆಗಾಗ್ಗೆ ನಡೆಯಬೇಕಲ್ಲದೆ ತರಬೇತಿ ಜೀವನದ ಅಂಗವಾಗಬೇಕು. 377 ಸಬ್‌ ಇನ್‌ಸ್ಪೆಕ್ಟರ್‌ಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭರ್ತಿ ಮಾಡಲಾಗಿದೆ. ಖಾಲಿ ಇರುವ 8000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ. ಸರ್ಕಾರ ಸದಾ ನಿಮೊಂದಿಗಿರುತ್ತದೆ ಎಂದು ಭರವಸೆ ನೀಡಿದರು.

ಅಭಿವೃದ್ಧಿ ಕೆಲಸಗಳಿಗೆ ಹಿಂಜರಿಕೆಯಿಲ್ಲ :
ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವಾಗ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ. ಕೆಲಸದಲ್ಲಿರುವ ಸಂದರ್ಭದಲ್ಲಿ ಕುಟುಂಬದವರ ಯೋಚನೆ ಮಾಡುವ ಅಗತ್ಯವಿಲ್ಲ ಸತ್ಯ, ನಿಷ್ಠೆಯಿಂದ ಸೇವೆ ಸಲ್ಲಿಸುತ್ತೀರಿ ಎಂದು ನಂಬಿರುವುದಾಗಿ ಹೇಳಿದರು.

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ :
ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದು, ಆ ದಿಕ್ಕಿನಲ್ಲಿ ಆರಕ್ಷಕರು ತಮ ಠಾಣಾ ವ್ಯಾಪ್ತಿಯಲ್ಲಿ ಮಾದಕವಸ್ತು ತಯಾರಕರು, ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ಪರಿಣಾಮ ಮಾರಕವಾಗುತ್ತದೆ. ಇದನ್ನು ನಿರ್ಮೂಲನೆ ಮಾಡದೆ ಹೋದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿಲ್ಲ. ಆದ್ದರಿಂದ ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದರು.

ಮಾನವೀಯತೆಯಿಂದ ಕೆಲಸ ಮಾಡಬೇಕು :
ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು ಎಂದು ಹೇಳಿದರು.

ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು :
ಸೈಬರ್‌ ಅಪರಾಧಗಳನ್ನು ನಿಗ್ರಹಿಸಲು ಸೂಕ್ತ ತರಬೇತಿ ನೀಡಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು. ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು. ಧೈರ್ಯದಿಂದ ಕೆಲಸ ಮಾಡಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಅಂಬೇಡ್ಕರ್‌ ಹೇಳಿದ್ದರು.

ಶ್ರೀಮಂತರು ಹಣಬಲದಿಂದ ದುರುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅಂಥ ಆಮಿಷಗಳಿಗೆ ಒಳಗಾಗಬಾರದು, ಧೈರ್ಯದಿಂದ ಕೆಲಸ ಮಾಡಿ ಪೊಲೀಸ್‌‍ ವೃತ್ತಿಯಲ್ಲಿ ಯಶಸ್ವಿಯಾಗಬೇಕು ಎಂದು ಕಿವಿ ಮಾತು ಹೇಳಿದರು.ಈ ಸಂದರ್ಭದಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್‌, ಸಚಿವರಾದ ಎಚ್‌.ಸಿ.ಮಹದೇವಪ್ಪ, ವೆಂಕಟೇಶ್‌, ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ ಸಲೀಂ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News