ಬೆಂಗಳೂರು, ಮಾ.21– ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಶೀಘ್ರವೇ ತನಿಖೆಯಾಗಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
48 ಶಾಸಕರು ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ. ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಹೇಳಿದ್ದು ರಕ್ಷಣೆಯಿಲ್ಲವೆಂದು? ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ? ಮಾಧ್ಯಮದವರು ಮಾತಾನಾಡಿಸಿದರೆ ನಾನು ಮಾತನಾಡಿಸುತ್ತೇನೆ ಎಂದು ಕಾಲೆಳೆದರು.
ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪಕ್ಕೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್, ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ.
ಮಾಡಿದ್ದುಣ್ಣೆ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ ಎಂದು ವ್ಯಂಗ್ಯವಾಡಿದರು.
ನಾಳಿನ ಕರ್ನಾಟಕ ಬಂದ್ ಕುರಿತು ಮಾತನಾಡಿದ ಡಿಸಿಎಂ, ರಾಜ್ಯದ ಹಿತಕ್ಕೆ ಒಳ್ಳೆ ಕೆಲಸಕ್ಕೆ ಏನಿದ್ದರೂ ನಾವು ಬೆಂಬಲ ನೀಡುತ್ತೇವೆ.
ಕಾನೂನಿನಲ್ಲಿ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಾವ ಗಲಾಟೆಗಳನ್ನೂ ಮಾಡದೆ, ಯಾವ ಬಂದ್ ಕೂಡ ಮಾಡದೇ ದಯವಿಟ್ಟು ಎಲ್ಲರೂ ಶಾಂತರೀತಿಯಿಂದ ಇರಬೇಕು ಎಂದು ಮನವಿ ಮಾಡಿದರು.