ಬೆಳಗಾವಿ,ಡಿ.9- ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಅಸ್ತ್ರಗಳನ್ನು ವಿರೋಧ ಪಕ್ಷಗಳು ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿವೆ. ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತಾಗಿ ಈ ಬಾರಿ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಸಿಗಲಿದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ವಕ್್ಫ ವಿಚಾರವನ್ನು ಕೈಗೆತ್ತಿಕೊಂಡು ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಪಟ್ಟು ಹಿಡಿಯಲಿದೆ. ನಿಲುವಳಿ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ಗದ್ದಲ ಉಂಟು ಮಾಡುವ ಸಾಧ್ಯತೆ ಇದೆ. ವಕ್್ಫ ಚರ್ಚೆಗೆ ಬಂದರೆ ಎರಡು ದಿನಗಳ ಕಾಲ ಇದೇ ಮುಂದುವರಿಯಲಿದೆ. ನಂತರದಲ್ಲಿ ಸಿಎಂ ಉತ್ತರವೂ ಮಹತ್ವ ಪಡೆದುಕೊಳ್ಳಲಿದೆ.
ವಕ್್ಫ ವಿಚಾರದ ಜೊತೆಗೆ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣವೂ ಸದನದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಲಿದೆ. ಬಳ್ಳಾರಿಯಲ್ಲಿ 5 ಬಾಣಂತಿಯರು ಮೃತಪಟ್ಟಿದ್ದಾರೆ. ಇದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಹೀಗಾಗಿ ಸದನದಲ್ಲಿ ಚರ್ಚೆಯ ಸಂದರ್ಭದಲ್ಲಿ ಈ ವಿಚಾರಕ್ಕೂ ವಿರೋಧ ಪಕ್ಷಗಳು ಹೆಚ್ಚಿನ ಆದ್ಯತೆಯನ್ನು ನೀಡಲಿದೆ.
ಇನ್ನು ಅಬಕಾರಿ ಇಲಾಖೆಯ ವಿರುದ್ಧ ಭ್ರಷ್ಟಾಚಾರ ಆರೋಪ ಸೇರಿದಂತೆ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮತ್ತು ಜೆಡಿಎಸ್ ತಂತ್ರಗಾರಿಕೆ ನಡೆಸುತ್ತಿದೆ.
ಇನ್ನು ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸಲು ವಿರೋಧ ಪಕ್ಷಗಳು ಸಜ್ಜಾಗುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳೂ ಇದರಲ್ಲಿ ಒಳಗೊಳ್ಳಲಿದೆ. ಇವೆಲ್ಲವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿಯಲ್ಲಿ ಹದಗೆಡುತ್ತಿದೆ ಎಂಬ ನಿಟ್ಟಿನಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ನಡೆಯಲಿದೆ.
ಅನುದಾನ ಕೊರತೆ :
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆ ಆಗದೆ ಇರುವ ಬಗ್ಗೆ ವಿಧಾನಸಭೆಯಲ್ಲಿ ನಿಯಮ 69 ರ ಅಡಿಯಲ್ಲಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪ ಮಾಡಲಿದ್ದಾರೆ.
ಬೆಳಗಾವಿ ಅಧಿವೇಶನದ ಮೂಲ ಉದ್ದೇಶ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು ಎಂಬುದಾಗಿದೆ. ಉತ್ತರ ಕರ್ನಾಟಕದಲ್ಲಿ ರೈತರು ಹಾಗೂ ಜನಸಾಮಾನ್ಯರು ಎದುರಿಸುವ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು. ಈ ಮೂಲಕ ಬೆಳಗಾವಿ ಅಧಿವೇಶನ ಅರ್ಥಪೂರ್ಣ ಆಗಬೇಕು ಎಂಬುವುದು ಈ ಭಾಗದ ಶಾಸಕರ ಬೇಡಿಕೆಯಾಗಿದೆ. ಆದರೆ ಪ್ರತಿವರ್ಷ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಅವಕಾಶ ಸಿಗುವುದು ಕೊನೆಯ ಗಳಿಗೆಯಲ್ಲಿ.
ಕಳೆದ ಬಾರಿಯೂ ಕೊನೆಯ ಎರಡು ದಿನವನ್ನು ಉತ್ತರ ಕರ್ನಾಟಕದ ಚರ್ಚೆಗೆ ಮೀಸಲಿಡಲಾಗಿತ್ತು. ಆದರೆ ಅಧಿವೇಶನದ ಕೊನೆಯ ಸದನದಲ್ಲಿ ಹೆಚ್ಚಿನ ಹುಮಸ್ಸು ಕಾಣಸಿಗುವುದಿಲ್ಲ. ಈ ನಿಟ್ಟಿನಲ್ಲಿ ಆರಂಭದಲ್ಲೇ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯಬೇಕು ಎಂಬ ಬೇಡಿಕೆ ಇದೆ. ಇದಕ್ಕೆ ಈ ಬಾರಿಯಾದರೂ ಅವಕಾಶ ಸಿಗುತ್ತಾ? ಎಂಬುದನ್ನು ಕಾದುನೋಡಬೇಕಿದೆ.