ಬೆಂಗಳೂರು, ಸೆ.9-ರಾಜ್ಯ ಒಕ್ಕಲಿಗರ ಸಂಘದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಹೆಚ್.ಎನ್.(ತಮಾಜಿ) ಮತ್ತು ಖಜಾಂಚಿಯಾಗಿ ರಘುಗೌಡ ಎಸ್.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಿ.ಜಿ.ಗಂಗಾಧರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಕೆ.ವಿ.ಶ್ರೀಧರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಖಂಜಾಚಿ ಸ್ಥಾನದ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಇವರಿಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಐದು ವರ್ಷಗಳ ಅವಧಿಯ ಸಂಘದ ಕಾರ್ಯಕಾರಿ ಸಮಿತಿಯ ಆಡಳಿತಾವಧಿಯಲ್ಲಿ ಆರನೇ ಬಾರಿಗೆ ಪದಾಧಿಕಾರಿಗಳ ಬದಲಾವಣೆ ಮಾಡಲಾಗಿದೆ. ಪ್ರಸಕ್ತ ಆಡಳಿತ ಮಂಡಳಿಯ ಅವಧಿಯು ಡಿಸೆಂಬರ್ ಅಂತ್ಯದವರೆಗೆ ಮಾತ್ರ ಇದೆ. ಉಳಿದಿರುವ ಅವಧಿಗೆ ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಯವರನ್ನು ಆಯ್ಕೆ ಮಾಡಲಾಗಿದೆ.
2025ರ ನವೆಂಬರ್ 23ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಎಲ್.ಶ್ರೀನಿವಾಸ್, ಉಪಾಧ್ಯಕ್ಷರಾಗಿ ಡಾ.ಕೆ.ವಿ.ರೇಣುಕಾಪ್ರಸಾದ್, ಎಂ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಜಿ.ಗಂಗಾಧರ್, ಖಜಾಂಚಿಯಾಗಿ ಕೆ.ವಿ.ಶ್ರೀಧರ್, ಸಹಾಯಕ ಕಾರ್ಯದರ್ಶಿಯಾಗಿ ಡಾ.ಡಿ.ಕೆ.ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ, ಒಂದು ವರ್ಷ ಪೂರ್ಣಗೊಳ್ಳುವ ಮುನ್ನವೇ ಗಂಗಾಧರ್ ಮತ್ತು ಶ್ರೀಧರ್ ಅವರು ಅಧಿಕಾರ ಕಳೆದುಕೊಂಡಿದ್ದಾರೆ. ಉಳಿದ ಪದಾಧಿಕಾರಿಗಳು ಮಾತ್ರ ಅಧಿಕಾರದಲ್ಲಿ ಮುಂದುವರೆದಿದ್ದಾರೆ.
