ಬೆಂಗಳೂರು,ಏ.29-ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಿಬಿಎಂಪಿಯ ಮಹಿಳಾ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ರಾಜಾಜಿನಗರದ ಡೋಬಿ ಘಾಟ್ ಬಳಿ ಸಂಭವಿಸಿದೆ.
ಕಂಠೀರವ ಸ್ಟುಡಿಯೋ ಬಳಿ ಇರುವ ಆಶ್ರಯನಗರದಲ್ಲಿ ವಾಸವಾಗಿದ್ದ ಸರೋಜಮ (50) ಮೃತಪಟ್ಟ ಬಿಬಿಎಂಪಿಯ ಪೌರ ಕಾರ್ಮಿಕರು.ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿದ್ದ ಸರೋಜಮ ಅವರು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಡೋಬಿ ಘಾಟ್ ಬಳಿ ಬೆಳಿಗ್ಗೆ 6.30ರ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಅವರಿಗೆ ಡಿಕ್ಕಿ ಹೊಡೆದು ಮೇಲೆ ಹರಿದಿದೆ.
ತೀವ್ರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರೆಂದು ವಿಜಯನಗರ ಸಂಚಾರಿ ಠಾಣೆ ಪೋಲಿಸರು ಈ ಸಂಜೆಗೆ ತಿಳಿಸಿದ್ದಾರೆ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತ ನಂತರ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಜಯನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.