ಪಾಟ್ನಾ,ಮಾ.31- ಬಿಹಾರದ ನಳಂದಾ ಜಿಲ್ಲೆಯಲ್ಲಿ ಶೀತಲ ಮಾತಾ ದೇವಾಲಯದಲ್ಲಿ ಭಕ್ತರ ನುಗ್ಗುವಿಕೆಯಿಂದ ಉಂಟಾದ ಕಾಲ್ತುಳಿತದಲ್ಲಿ 8 ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 12ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಎಂಟು ಮಂದಿ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.
ಚೈತ್ರ ಮಾಸದ ಕೊನೆಯ ಮಂಗಳವಾರವಾದ ಇಂದು ಭಕ್ತರ ಬೃಹತ್ ಗುಂಪು ನೆರೆದಿತ್ತು. ಸರತಿ ಸಾಲು ಕಾಯ್ದುಕೊಳ್ಳದೆ ಏಕಾಏಕಿ ಭಕ್ತರು ದೇವಾಲಯದೊಳಗೆ ನುಗ್ಗಿದ್ದರಿಂದ ತೀವ್ರ ನೂಕುನುಗ್ಗಲು ಉಂಟಾಗಿದೆ. ಭಕ್ತರ ನುಗ್ಗುವಿಕೆಯಿಂದ ಉಂಟಾದ ಕಾಲ್ತುಳಿತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ದೇವರ ದರ್ಶನ ಪಡೆಯುವ ಆತುರದಲ್ಲಿ ಕೆಲವು ಭಕ್ತರು ಸರತಿ ಸಾಲನ್ನು ಮುರಿದು ಒಬ್ಬರ ಮೇಲೊಬ್ಬರು ಹತ್ತಲು ಪ್ರಾರಂಭಿಸಿದರು. ಇದು ಅಸ್ತವ್ಯಸ್ತ ಪರಿಸ್ಥಿತಿಯನ್ನು ಸೃಷ್ಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ನಂತರ ದೇಗುಲದ ಆಡಳಿತದ ನಿರ್ಲಕ್ಷ್ಯದ ಬಗ್ಗೆ ಪೊಲೀಸ್ ಆಡಳಿತದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಪ್ರತ್ಯಕ್ಷದರ್ಶಿಗಳು ಈ ಘಟನೆಗೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ತಕ್ಷಣ ಬಿಹಾರ ಸರ್ಕಾರ ತೀವು ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ನಿತೀಶ್ಕುಮಾರ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಸಂತ್ರಸ್ತ ಕುಟುಂಬಗಳಿಗೆ ಸಹಾಯ ನೀಡುವಂತೆ ಸೂಚಿಸಿದ್ದಾರೆ.
ಜಿಲ್ಲಾಡಳಿತವು ಘಟನೆಯ ಕುರಿತು ವಿಚಾರಣೆ ಆರಂಭಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ನಳಂದದಲ್ಲಿದ್ದರು. ನಳಂದ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದರು.
